ನವದೆಹಲಿ: ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಭಾರತೀಯ ಜನತಾ ಪಾರ್ಟಿ ಸಜ್ಜಾಗಿರುವ ಬೆನ್ನಲ್ಲೇ ಹಲವು ರಾಜ್ಯಗಳ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಿಸಲು ಕೂಡಾ ನಿರ್ಧರಿಸಿದೆ ಎಂಬ ಮಾಹಿತಿ ಲಭಿಸಿದೆ. ಒಂದು ಮೂಲದ ಪ್ರಕಾರ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಮಾಜಿ ಬಿಜೆಪಿ ರಾಜ್ಯ ಅಧ್ಯಕ್ಷ ಅಣ್ಣಾ ಮಲೈ ಅವರನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರನ್ನಾಗಿಸಲು ಚಿಂತನೆ ನಡೆದಿದೆ ಎಂಬ ಸುದ್ದಿ ಹರಡಿದೆ. ಅಲ್ಲದೆ ರಾಜ್ಯದಲ್ಲಿ ಬಿ.ವೈ. ವಿಜಯೇಂದ್ರ ಅವರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಜೆಪಿಯ ನಿಯಮದ ಪ್ರಕಾರ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲು 37 ಸಂಘಟನಾ ರಾಜ್ಯ ಘಟಕಗಳ ಪೈಕಿ 19 ಘಟಕಗಳಿಗೆ ಅಧ್ಯಕ್ಷರನ್ನು ನೇಮಿಸಿರಬೇಕು. ಈಗಾಗಲೇ 15 ರಾಜ್ಯಗಳಿಗೆ ನೇಮಕ ಆಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಗುಜರಾತ್ನಂತಹ ದೊಡ್ಡ ರಾಜ್ಯಗಳಿಗೆ ಅಧ್ಯಕ್ಷರ ಆಯ್ಕೆ ಬಾಕಿ ಇದೆ. ಹೀಗಾಗಿ ಆರ್ಎಸ್ಎಸ್ ಮತ್ತು ಪಕ್ಷದ ಸೈದ್ಧಾಂತಿಕ ಸದಸ್ಯರ ಜೊತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಿರಿಯ ನಾಯಕರು ನಾಲ್ಕೈದು ದಿನಗಳಿಂದ ಸಮಾಲೋಚನೆ ನಡೆಸಿದ್ದಾರೆ.
ರಾಜ್ಯಗಳ ಅಧ್ಯಕ್ಷರ ಆಯ್ಕೆ ಮುಗಿಯುತ್ತಿದ್ದಂತೆ ನಡ್ಡಾ ಅವರ ಸ್ಥಾನ ತುಂಬಲಾಗುವುದು. ಈ ವರ್ಷಾಂತ್ಯಕ್ಕೆ ಬಿಹಾರ ಚುನಾವಣೆ ಇದೆ. ಮುಂದಿನ ವರ್ಷ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳಕ್ಕೆ ಚುನಾವಣೆ ಇದ್ದು, ಅದನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಆಗಲಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. 2020ರ ಫೆಬ್ರುವರಿಯಲ್ಲಿ ಅಧ್ಯಕ್ಷರಾಗಿದ್ದ ನಡ್ಡಾ ಅವರನ್ನು ಮೂರು ವರ್ಷಗಳ ಅವಧಿ ಮುಗಿದ ನಂತರವೂ ಮುಂದುವರಿಸಲಾಗಿದೆ.
ತಮಿಳುನಾಡಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾ ಮಲೈ ಅವರ ಅವಧಿ ಮುಗಿದಿದೆ. ತಮಿಳುನಾಡಲ್ಲಿ ಬಿಜೆಪಿ ಅಸ್ತಿತ್ವವೇ ಇಲ್ಲದಿದ್ದ ಸಮಯದಲ್ಲಿ ಅಣ್ಣಾ ಮಲೈ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಬಿಜೆಪಿ ನಿಧಾನವಾಗಿ ಬೆಳೆಯಲಾರಂಭಿಸಿದೆ. ಅಲ್ಲದೆ ದಕ್ಷಿಣ ಭಾರತದ ಒಬ್ಬ ವ್ಯಕ್ತಿಗೆ ಉನ್ನತ ಹುದ್ದೆ ನೀಡಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಬೆಳೆಸುವ ಸಲುವಾಗಿ ಅಣ್ಣಾ ಮಲೈಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ನೀಡುವ ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಬಿ.ವೈ. ವಿಜಯೇಂದ್ರ ಅವರು ಸದ್ಯ ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷರಾಗಿದ್ದು, ಅವರನ್ನು ಅಧ್ಯಕ್ಷ ಸ್ಥಾನದಿಂದ ತೆರವು ಮಾಡಿದರೆ ಯಡಿಯೂರಪ್ಪ ಟೀಂನಿಂದ ವಿರೋಧ ವ್ಯಕ್ತವಾಗಬಹುದು. ಇದರಿಂದ ರಾಜ್ಯದಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ವಿಜಯೇಂದ್ರ ಅವರೇ ರಾಜ್ಯ ಬಿಜೆಪಿ ಅಧ್ಯಕ್ಷರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.