ರಾಜ್ಯ ಸಭೆಗೆ ಅಣ್ಣಾ ಮಲೈ? ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ ಪಕ್ಕಾ?

ಚೆನ್ನೈ: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಸೋಲಿಸಲು ಬಿಜೆಪಿ ಹಾಗೂ ಎಐಎಡಿಎಂಕೆ ಮತ್ತೆ ಮೈತ್ರಿಮಾಡಿಕೊಂಡ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ಅವರನ್ನು ಬದಲಾವಣೆ ಮಾಡಲಾಗಿದೆ. ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅಧಿಕಾರವಹಿಸಿಕೊಂಡಿದ್ದಾರೆ.

ಇದೀಗ ಯಾವುದೇ ಹುದ್ದೆಯಲ್ಲಿಲ್ಲದೆ ಖಾಲಿ ಕೈಯ್ಯಲ್ಲಿ ಕುಳಿತಿರುವ ಕೆ. ಅಣ್ಣಾಮಲೈ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುತ್ತಾರೆ ಎನ್ನುವ ವದಂತಿಯೂ ಹಬ್ಬಿತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ ಅಣ್ಣಾ ಮಲೈ, ಮೋದಿ ಸಂಪುಟವನ್ನು ಸೇರುವ ಸಾಧ್ಯತೆ ಹೆಚ್ಚಿದೆ.
ಆಂಧ್ರ ಪ್ರದೇಶದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 29 ಕೊನೆಯ ದಿನವಾಗಿದೆ. ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಟಿಡಿಪಿ-ಜನಸೇನಾ ಒಂದು ಸ್ಥಾನವನ್ನು ಬಿಜೆಪಿಗೆ ನೀಡಿವೆ. ಈ ಒಂದು ಟಿಕೆಟ್‌ಗಾಗಿ ಕೆ. ಅಣ್ಣಾಮಲೈ, ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಹೆಸರು ಕೇಳಿ ಬರುತ್ತಿದೆ. ಕೆ. ಅಣ್ಣಾಮಲೈ ಅವರನ್ನು ರಾಜ್ಯಸಭಾ ಸದಸ್ಯರಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.

ರಾಜ್ಯಸಭಾ ಸದಸ್ಯರಾಗಿದ್ದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿಜಯಸಾಯಿ ರೆಡ್ಡಿ ಜನವರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸದಸ್ಯತ್ವದ ಅವಧಿ 2028ರ ತನಕ ಇದೆ. ಆದ್ದರಿಂದ ಈಗ ಉಪ ಚುನಾವಣೆ ನಡೆಯುತ್ತಿದೆ. ಈ ಸೀಟನ್ನು ಆಂಧ್ರ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಟಿಡಿಪಿ-ಜನಸೇನಾ ಪಕ್ಷ ಬಿಜೆಪಿಗೆ ಬಿಟ್ಟುಕೊಡಲಿವೆ. ವೈಎಸ್‌ಆರ್ ಕಾಂಗ್ರೆಸ್‌ನ ಇಬ್ಬರು ಸದಸ್ಯರು ಈ ಹಿಂದೆ ರಾಜೀನಾಮೆ ನೀಡಿದ್ದರು.

Madras HC grants nod for PM Modi roadshow after cops deny permission

ಆದ್ದರಿಂದ ಆಂಧ್ರ ಪ್ರದೇಶ ರಾಜ್ಯದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ ತಿಂಗಳಿನಲ್ಲಿ ಉಪ ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿ ಟಿಡಿಪಿ ಸರಳ ಬಹುಮತ ಹೊಂದಿದೆ. ಆದ್ದರಿಂದ ಎರಡು ಸೀಟುಗಳನ್ನು ಪಕ್ಷ ನಿರಾಯಾಸವಾಗಿ ಗೆಲ್ಲಲಿದೆ.

ಅಮೇಥಿಯಲ್ಲಿ ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸೋಲಿಸಿದ್ದ ಸ್ಮೃತಿ ಇರಾನಿ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸೋಲು ಕಂಡಿದ್ದಾರೆ. ಅವರು ದೆಹಲಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಈಗ ಸ್ಮೃತಿ ಇರಾನಿ ಆಂಧ್ರ ಪ್ರದೇಶದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ತಮಿಳುನಾಡಿನ ಪ್ರಭಾವಿ ನಾಯಕ. ರಾಜ್ಯದಲ್ಲಿ ಬಿಜೆಪಿಯ ಸಂಘಟನೆಯಲ್ಲಿ ಸಕ್ರಿಯವಾಗಿದ್ದಾರೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದಾರೆ. ಈಗ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯ ಕಾರಣ ಅಣ್ಣಾಮಲೈ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದು, ಅವರಿಗೆ ಬೇರೆ ಸ್ಥಾನ ನೀಡಲು ಪಕ್ಷ ಚಿಂತನೆ ನಡೆಸಿದೆ. 2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅರಾವಕುರಿಚಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. 68,000ಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಅವರು ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಸಹ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು.

error: Content is protected !!