ಸಿಂಗಾಪುರ : ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಯುವ ಪತ್ರಕರ್ತ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ʻಸಾಧನೆಯ ಹಾದಿಯಲ್ಲಿʼ ಕಿರು ಹೊತ್ತಿಗೆಯನ್ನು ಸಿಂಗಾಪುರ ದೇಶದ ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್ ನಿರ್ದೇಶಕಿ ಅನಿತಾ ಜಗದೀಶ್ ಬಿಡುಗಡೆಗೊಳಿಸಿದರು.
ಸಿಂಗಾಪುರದ ಪ್ಲ್ಯೂಮೆ ಕಾನ್ಫರೆನ್ಸ್ ಹಾಲ್ ನಲ್ಲಿ ಭಾನುವಾರ ನಡೆದ 49 ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಲ್ಲಿ ಕಿರು ಹೊತ್ತಿಗೆ ಬಿಡುಗಡೆಗೊಳಿಸಿ ಮಾತನಾಡಿದ ಅನಿತಾ ಜಗದೀಶ್, ಪತ್ರಕರ್ತರು ಹಲವಾರು ಸವಾಲುಗಳನ್ನು ಎದುರಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರಾಗಿದ್ದುಕೊಂಡು ಶ್ರೀನಿವಾಸ್ ಅವರು ಮಾಡುತ್ತಿರುವ ಸಮಾಜಮುಖಿ ಕೆಲಸಗಳು ಸಮಾಜಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾತನಾಡಿ, ಸಿಂಗಾಪುರದ ಜನತೆಯ ಪ್ರೀತಿ, ಜೀವನ ಕ್ರಮ ಹಾಗೂ ಪರಿಸರ ಪ್ರೇಮ ನಮಗೆಲ್ಲರಿಗೂ ಮಾದರಿಯಾಗಿದೆ. ಮಂಗಳೂರು ಕೂಡಾ ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿಯಾಗಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಿಂಗಾಪುರ ಕನ್ನಡ ಸಂಘದ ಮಾಜಿ ಕಾರ್ಯದರ್ಶಿ ಗೋಪಾಲ್, ಇಂಟರ್ನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಒಫ್ ಇಂಡಿಯಾ ಅಧ್ಯಕ್ಷ ಮಂಜುನಾಥ್ ಸಾಗರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.