ಮಂಗಳೂರು: ಮೇ 16ರಂದು ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಕುರಿತಂತೆ ಸಮಾಲೋಚನಾ ಸಭೆ ನಡೆಸುವಂತೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ.
ಕರಾವಳಿ ಭಾಗದ ಅಭಿವೃದ್ಧಿಗಾಗಿ ಪ್ರವಾಸೋದ್ಯಮದ ಬೆಳವಣಿಗೆ, ಕೈಗಾರಿಕಾ ಸ್ಥಾಪನೆ ಮತ್ತು ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆ, ಉದ್ಯೋಗ ಸೃಸ್ಟಿಯಂತಹ ಅಂಶಗಳಿಗೆ ಪ್ರಾಮುಖ್ಯತೆ ನೀಡುವ ಅವಶ್ಯಕತೆಯಿದೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಅವಿಭಾಜ್ಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಮತ್ತು ಜಿಲ್ಲೆಯ ಕೈಗಾರಿಕೋದ್ಯಮಿಗಳು, ಬಂಡವಾಳ ಹೂಡಿಕೆದಾರರು ಹಾಗೂ ಸಂಬಂಧಪಟ್ಟ ಪ್ರಮುಖ ಇಲಾಖೆಯ ಅಧಿಕಾರಿಗಳ ಜೊತೆ ಪ್ರತ್ಯೇಕ ಸಭೆಯನ್ನು ಆಯೋಜಿಸಿದಲ್ಲಿ ಜಿಲ್ಲೆಯ ಜನತೆಗೆ ಉತ್ತಮ ಸಂದೇಶವನ್ನು ನೀಡಿದಂತಾಗುತ್ತದೆ ಎಂದು ಮಂಜುನಾಥ ಭಂಡಾರಿಯವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.