ಮಂಗಳೂರು: ನಿನ್ನೆ ಸಂಜೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಎಂಬಲ್ಲಿ ನಡೆದಿದ್ದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ಧನುಪೂಜೆ ಸುಮಿತ್ ಆಚಾರ್, ದೀಪಕ್ ಮತ್ತು 15 ಮಂದಿ ಭಾಗಿಯಾಗಿದ್ದಾರೆ ಎಂದು ನಿಸಾರ್ ಎಂಬವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.
ಅಬ್ದುಲ್ ರಹಿಮಾನ್ ಮತ್ತು ಖಲಂದರ್ ಶಾಫಿ ಅವರು ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಮರಳನ್ನು ಇಳಿಸುವ ಸಂದರ್ಭ ಸ್ಥಳೀಯರಾದ ದೀಪಕ್, ಸಮೀತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳಿಂದ ತಿವಿದು ಕಡಿದರು.ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ, ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿರುತ್ತಾರೆ. ಇದ್ದನ್ನು ಕಂಡು ಅಲ್ಲಿ ಜನ ಸೇರಿ ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ.
ಹಲ್ಲೆಗೈದ ಪೈಕಿ ಇಬ್ಬರು ಸ್ಥಳೀಯ ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಖಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿಗಳು ಒಂದು ಸಂಘಟನೆಯಲ್ಲಿ ಗುರುತಿಸಿಕೊಂಡವರು ಎನ್ನಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಸ್ಥಳೀಯ ಮಸೀದಿಯ ಕಾರ್ಯದರ್ಶಿಯಾಗಿದ್ದರು. ಮದುವೆಯಾಗಿ ಎರಡು ಮಕ್ಕಳು ಇದ್ದು ಯಾವುದೇ ಕೃತ್ಯಗಳಲ್ಲೂ ಭಾಗಿಯಾಗಿಲ್ಲ, ಯಾವುದೇ ಸಂಘಟನೆಗಳಲ್ಲೂ ಗುರುತಿಸಿಕೊಂಡಿಲ್ಲ. ಅಮಾಯಕ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ, ಹತ್ಯೆ ಹಿಂದೆ ಇರೋ ಎಲ್ಲರನ್ನೂ ತಕ್ಷಣ ಬಂಧಿಸಬೇಕೆಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೊರ ಜಿಲ್ಲೆಯಿಂದ ಹೆಚ್ಚುವರಿ ಪೊಲೀಸರನ್ನು ತರಿಸಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದು ಭದ್ರತೆ ಪರಿಶೀಲಿಸಲಿದ್ದಾರೆ. ಮೃತ ಅಬ್ದುಲ್ ರಹಿಮಾನ್ ಅಂತ್ಯ ಸಂಸ್ಕಾರ ಇಂದು ಅವರ ಸ್ವಗ್ರಾಮ ಕೊಳ್ತಮಜಲ್ ನಲ್ಲಿ ನಡೆಯಲಿದೆ.