ಮಂಗಳೂರು: ʻಕೋಮುಗಲಭೆ, ಕೋಮು ಹತ್ಯೆಗಳನ್ನು ನಿಯಂತ್ರಿಸಲು ಕೋಮು ಹಿಂಸೆ ನಿಗ್ರಹ ಕಾರ್ಯಪಡೆಯನ್ನು ಕೂಡಲೇ ಸ್ಥಾಪಿಸಲಾಗುವುದು. ಮಂಗಳೂರಲ್ಲಿ ನಡೆದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿ, ಸರಕಾರ ಕ್ರಮ ತೆಗೆದುಕೊಳ್ಳಲಿದೆʼ ಎಂದು ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ಹೇಳಿದ್ದಾರೆ.
ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿದ್ದ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ ಎಂದರು.