ಮಂಗಳೂರು: ಮಂಗಳೂರಿನ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯಗಳು ಆರಂಭಗೊಂಡಿದೆ. ಮಂಗಳೂರಿನ ವಕೀಲರು ಈ ಹಿನ್ನೆಲೆಯಲ್ಲಿ ಅನೇಕ ದಿನಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಜಯ ಸಿಗುವ ಎಲ್ಲಾ ಲಕ್ಷಣಗಳು ಗೋಚರವಾಗಿದೆ.
ಹೌದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ಅಧಿವೇಶನದ ಮುಂದಿಟ್ಟಿದ್ದಾರೆ. ಅಲ್ಲದೆ ಈ ವಿಚಾರದಲ್ಲಿ ರಾಜ್ಯದ ವಿಧಾನ ಮಂಡಲದಲ್ಲಿ ಚರ್ಚೆ ನಡೆಸಲಾಗಿದೆ.
ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯು ಇತ್ತೀಚೆಗೆ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಹೈಕೋರ್ಟ್ ಸಂಚಾರಿ ಪೀಠಕ್ಕಾಗಿ ಮೀಸಲಿರಿಸಬೇಕೆಂದು ದಿನೇಶ್ ಗುಂಡೂರಾವ್ ಮನವಿಯಲ್ಲಿ ಕೋರಿರುತ್ತಾರೆ. ಸದ್ರಿ ಮನವಿಯನ್ನು ಆದ್ಯತೆಯಲ್ಲಿ ಪರಿಗಣಿಸಿ ಸಂಚಾರಿ ಪೀಠದ ಉದ್ದೇಶಕ್ಕಾಗಿ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಮೀಸಲಿರಿಸಲು ಆದೇಶಿಸುವಂತೆ ಕೋರಲಾಗಿದೆ.