ಚಿಕ್ಕಬಳ್ಳಾಪುರ: ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ನಡೆದಿದೆ.
ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ, ಈಶ್ವರಪ್ಪ ಎಂದು ಗುರುತಿಸಲಾಗಿದೆ.
ಬೆಳಗ್ಗೆ ದೇವಸ್ಥಾನಕ್ಕೆಂದು ಇನ್ನೋವಾ ಕಾರಿನಲ್ಲಿ 8 ಮಂದಿ ತೆರಳುತ್ತಿದ್ದರು. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಮೃತದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.