ನವದೆಹಲಿ: ಜುಲೈ 16ರಂದು ಯೆಮೆನ್ನಲ್ಲಿ ಗಲ್ಲು ಶಿಕ್ಷೆ ನಿಗದಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಬದುಕುಳಿಸಲು ಎರಡು ದಿನ ಮಾತ್ರ ಬಾಕಿ ಇದೆ. ಅವರ ಬಿಡುಗಡೆ ಮಾಡಿಸಲು ಅಥವಾ ಮರಣದಂಡನೆಯನ್ನು ತಡೆಯಲು ಸೀಮಿತ ಆಯ್ಕೆಗಳಿವೆ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಇನ್ನೆರಡೇ ದಿನಗಳಲ್ಲಿ ನಿಮಿಷಾ ಪ್ರಿಯಾ ಅವರನ್ನು ನೇಣಿಗೇರಿಸಲಾಗುತ್ತದೆ ಎಂಬ ಕಾರಣಕ್ಕೆ ಈ ಕುರಿತಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಈ ವಿಷಯದಲ್ಲಿ ಭಾರತವು ಏನೆಲ್ಲ ಪ್ರಯತ್ನಿಸಬಹುದೋ ಈಗಾಗಲೇ ಆ ಎಲ್ಲ ಮಿತಿಯನ್ನು ತಲುಪಿದೆ ಎಂದು ಹೇಳಿದ್ದಾರೆ.
“ಭಾರತ ಸರ್ಕಾರವು ಹೆಚ್ಚಿನದನ್ನು ಏನೂ ಮಾಡಲು ಸಾಧ್ಯವಿಲ್ಲ. ಯೆಮೆನ್ನ ಸೂಕ್ಷ್ಮತೆಯನ್ನು ನೋಡಿದರೆ ಅದು ರಾಜತಾಂತ್ರಿಕವಾಗಿ ಗುರುತಿಸಲ್ಪಟ್ಟಿಲ್ಲ. ನಿಜವಾಗಿ ಏನು ನಡೆಯುತ್ತಿದೆ ಎಂದು ನಮಗೆ ತಿಳಿಯಲು ಯಾವುದೇ ಮಾರ್ಗವಿಲ್ಲ. ನಿಮಿಷಾ ಅವರನ್ನು ಉಳಿಸಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನಿಸಿದೆ. ಇನ್ನೂ ಪ್ರಯತ್ನ ನಡೆಯುತ್ತಿದೆ” ಎಂದು ವೆಂಕಟರಮಣಿ ಹೇಳಿದ್ದಾರೆ.
“ಭಾರತ ಸರ್ಕಾರವು ಎಲ್ಲಿಯವರೆಗೆ ಹೋಗಬಹುದೋ ನಾವು ಅದನ್ನು ತಲುಪಿದ್ದೇವೆ. ಯೆಮೆನ್ ಪ್ರಪಂಚದ ಬೇರೆ ಯಾವುದೇ ಭಾಗದಂತೆ ಅಲ್ಲ. ಸಾರ್ವಜನಿಕವಾಗಿ ಮಾತನಾಡುವ ಮೂಲಕ ನಾವು ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಲು ಬಯಸಲಿಲ್ಲ. ನಾವು ಖಾಸಗಿ ಮಟ್ಟದಲ್ಲಿಯೇ ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ನಿಮಿಷಾ ಅವರ ಗಲ್ಲು ಶಿಕ್ಷೆಯನ್ನು ತಡೆಯಲು ಉಳಿದಿರುವ ಏಕೈಕ ಮಾರ್ಗವೆಂದರೆ ಬ್ಲಡ್ ಮನಿ (ಮೃತರ ಕುಟುಂಬಕ್ಕೆ ಅವರು ಕೇಳಿದಷ್ಟು ಆರ್ಥಿಕ ಸಹಾಯ ನೀಡುವುದು) ಮಾತ್ರ. ಆದರೆ, ಇದರಲ್ಲಿ ಸರ್ಕಾರ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಇದು ನಿಮಿಷಾ ಅವರ ಕುಟುಂಬದ ಖಾಸಗಿ ವಿಷಯ. ಶೆರಿಯಾ ಕಾನೂನಿನಡಿ ಇದಕ್ಕೆ ಅವಕಾಶವಿದೆ. ಆದರೆ, ಇದಕ್ಕೆ ನಿಮಿಷಾ ಅವರ ಕುಟುಂಬ ಒಪ್ಪಬೇಕಷ್ಟೆ” ಎಂದು ವಕೀಲರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ.
ನಿಮಿಷಾ ಪ್ರಿಯಾ ಅವರ ವಕೀಲರು ಮತ್ತು ಅಟಾರ್ನಿ ಜನರಲ್ ಇಬ್ಬರಿಂದಲೂ ವಾದಗಳನ್ನು ಕೇಳಿದ ನಂತರ ಸುಪ್ರೀಂ ಕೋರ್ಟ್ ಜುಲೈ 18ರ ಶುಕ್ರವಾರದಂದು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿತು. “ಪ್ರಕರಣದ ಸ್ಥಿತಿಯ ಬಗ್ಗೆ ಎರಡೂ ಕಡೆಯುವರು ಮುಂದಿನ ದಿನಾಂಕದಂದು ನ್ಯಾಯಾಲಯಕ್ಕೆ ತಿಳಿಸಬಹುದು” ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ, ಮೂಲಗಳು ತಿಳಿಸಿರುವಂತೆ ಒಂದುವೇಳೆ ಜುಲೈ 16ಕ್ಕೆ ನಿಮಿಷಾ ಪ್ರಿಯಾ ಅವರನ್ನು ನೇಣಿಗೇರಿಸುವುದು ನಿಜವಾದರೆ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆ ವೇಳೆ ಆಕೆ ಬದುಕಿಯೇ ಇರುವುದಿಲ್ಲ.
ಯೆಮೆನ್ ಹೌತಿ ನಿಯಂತ್ರಿತ ಸನಾ ವ್ಯಾಪ್ತಿಯಲ್ಲಿ ಬರುವುದರಿಂದ ಮತ್ತು ರಾಜತಾಂತ್ರಿಕ ಅಡೆತಡೆಗಳಿಂದಾಗಿ ಆಕೆಯ ಬಿಡುಗಡೆಗಾಗಿ ಕೆಲಸ ಮಾಡುತ್ತಿರುವ ಸರ್ಕಾರಿ ಸಂಸ್ಥೆಗಳು ಮತ್ತು ಸಂಘಟನೆಗಳು ಯಾವುದೇ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗಿಲ್ಲ.