- ಮಂಗಳೂರು: ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ಅನಾಮಧೇಯ ವ್ಯಕ್ತಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದು, ಈ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ರಾಜ್ಯ ಮಹಿಳಾ ಆಯೋಗ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (Special Investigation Team) ರಚಿಸಿದೆ.
ಎಸ್ಐಟಿ ತಂಡದ ಡಾ. ಪಣವ್ ಮೊಹಾಂತಿ (ಐ.ಪಿ.ಎಸ್. ಪೊಲೀಸ್ ಮಹಾ ನಿರ್ದೇಶಕರು, ಅಂತರಿಕ ಭದ್ರತಾ ವಿಭಾಗ, ಬೆಂಗಳೂರು) ಅವರು ಮುಖ್ಯಸ್ಥರಾಗಿದ್ದಾರೆ.
ಎಂ.ಎನ್. ಅನುಚೇತ್( ಐಪಿಎಸ್ ಉಪ ಪೊಲೀಸ್ ಮಹಾ ನಿರೀಕ್ಷಕರು, ನೇಮಕಾತಿ, ಬೆಂಗಳೂರು), ಸೌಮ್ಯಲತ (ಐ.ಪಿ.ಎಸ್. ಉಪ ಪೊಲೀಸ್ ಆಯುಕ್ತರು, ಸಿ.ಎ.ಆರ್. ಕೇಂದ್ರಸ್ಥಾನ ಬೆಂಗಳೂರು ನಗರ) ಹಾಗೂ ಜಿತೇಂದ್ರ ಕುಮಾರ್ ದಯಾಮ(ಐ.ಪಿ.ಎಸ್. ಪೊಲೀಸ್ ಅಧೀಕ್ಷಕರು. ಅಂತರಿಕ ಭದ್ರತಾ ವಿಭಾಗ, ಬೆಂಗಳೂರು.) ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ
ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ. 211(ಎ), ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಪತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನೆಲೆಯಲ್ಲಿ ಎಸ್ಐಟಿ ರಚಿಸಲಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷರ ಪತ್ರದಲ್ಲಿ ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದರು. ದಿನಾಂಕ: 12-07-2025ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ತಿಳಿಸಲಾಗಿದೆ. ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ಸರ್ಕಾರವನ್ನು ಪತ್ರ ಬರೆದು ಕೋರಿದ್ದರು. ಈ ಹಿನ್ನೆಲೆ ಎಸ್ಐಟಿ ರಚಿಸಲಾಗಿದೆ
ಹಾಗಾಗಿ ಇದಕ್ಕೆ ಸಂಬಂಧ ಪಟ್ಟ ಕರ್ನಾಟಕ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ, ದಾಖಲಾಗುವ ಇತರೆ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಯನ್ನು ಡಿಜಿ ಮತ್ತು ಐಜಿಪಿ ಈ ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಬೇಕು ಹಾಗೂ ವಿಶೇಷ ತನಿಖಾ ತಂಡಕ್ಕೆ ಅವಶ್ಯವಿರುವ ಇತರೆ ಅಧಿಕಾರಿ/ಸಿಬ್ಬಂದಿಯನ್ನು ಒದಗಿಸಬೇಕು. ಈ ವಿಶೇಷ ತನಿಖಾ ತಂಡವು (Special Investigation Team) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಬೇಕು ಎಂದು ಸೂಚಿಸಲಾಗಿದೆ.
ಅಲ್ಲದೆ ವಿಶೇಷ ತನಿಖಾ ತಂಡವು ತನಿಖೆಗೆ ಸಂಬಂಧಿಸಿದ ತನಿಖಾ ಪ್ರಗತಿಯನ್ನು ಆಗಿಂದಾಗೆ, ಡಿಜಿ ಮತ್ತು ಐಜಿಪಿ ರವರಿಗೆ ವರದಿ ಮಾಡಬೇಕು.
ಪ್ರಕರಣಗಳ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು, ಬೆಂಗಳೂರು ರವರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸತಕ್ಕದ್ದು ಎಂದು ಆದೇಶಿಸಲಾಗಿದೆ.