ಮಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿ ಮೊದಲ ಗುಂಡಿಯಲ್ಲಿ ಕೆಲವೊಂದು ಸೊತ್ತುಗಳು ಪತ್ತೆ ಹಚ್ಚಿದ್ದಾಗಿ ಈ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಐಟಿಯ ಕಾರ್ಯಾಚರಣೆಯು ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ದಾರಿ ತೆರೆದಿದೆ. ಮಂಗಳವಾರದ ಕಾರ್ಯಚರಣೆಯ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, PAN ಕಾರ್ಡ್ ಹಾಗೂ ATM ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯು ತನಿಖೆಗೆ ಹೊಸ ಆಯಾಮ ನೀಡಿದೆ ಎಂದು ಅವರು ಹೇಳಿದ್ದಾರೆ.
ಎಸ್ಐಟಿಯು ಈ ಬೆಳವಣಿಗೆಯ ನಂತರ ತಕ್ಷಣ ಸ್ಥಳದ 10 ಅಡಿ ಆಳದವರೆಗೆ ಉತ್ಖನನ ಕಾರ್ಯಾಚರಣೆಯನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿದ್ದು, ಇದು ಅವರ ವೃತ್ತಿಪರ ಬದ್ಧತೆಯನ್ನು ತೋರಿಸುತ್ತದೆ. ಈ ಕಾರ್ಯವು ಶ್ರಮದಾಯಕವಾದರೂ, ಯಾವುದೇ ಸಾಕ್ಷ್ಯವನ್ನು ಕಡೆಗಣಿಸದೆ ಸಮಗ್ರವಾಗಿ ಪರಿಶೀಲಿಸುವ ದೃಢ ಸಂಕಲ್ಪ ಮಾಡಿರುವ ಎಸ್ಐಟಿಯ ಕಾರ್ಯವೈಖರಿಯು ಶ್ಲಾಘನೀಯ ಎಂದು ವಕೀಲ ಮಂಜುನಾಥ್ ಎನ್. ಹೇಳಿದ್ದಾರೆ.
ಪತ್ತೆಯಾಗಿರುವ PAN ಕಾರ್ಡ್ ಮತ್ತು ATM ಕಾರ್ಡ್ ಗಳಲ್ಲಿ ಒಂದರ ಮೇಲೆ ಪುರುಷನ ಹೆಸರು ಮತ್ತು ಇನ್ನೊಂದರಲ್ಲಿ ‘ಲಕ್ಷ್ಮಿ’ ಎಂಬ ಹೆಸರಿರುವುದು ಕಂಡುಬಂದಿದೆ. ಈ ಸುಳಿವುಗಳು ವಿಚಾರಣೆಗೆ ಹೊಸ ದಿಕ್ಕು ನೀಡಬಹುದು. ಎಸ್ ಐ ಟಿ ಅಧಿಕಾರಿಗಳು ಈ ಪ್ರಮುಖ ಸುಳಿವಿನ ಬೆನ್ನತ್ತಿ ಹೋಗುತ್ತಾರೆ ಎಂಬ ಭರವಸೆಯಿದೆ ಎಂದು ಅವರು ಹೇಳಿದ್ದಾರೆ.
ಇದುವರೆಗೆ ಎಸ್ಐಟಿಯು ಪ್ರದರ್ಶಿಸಿರುವ ಗಂಭೀರತೆ, ಶಿಸ್ತು ಮತ್ತು ಕಾರ್ಯದಕ್ಷತೆ ನಮಗೆ ಭರವಸೆಯನ್ನು ಹುಟ್ಟುಹಾಕಿದೆ. ಮುಂದಿನ ಸ್ಥಳಗಳ ಪರಿಶೀಲನೆಯ ವೇಳೆ ನಾವು ಅವರ ಕೆಲಸಗಳಲ್ಲಿ ಸಂಪೂರ್ಣ ನಂಬಿಕೆಯನ್ನು ಇಡುತ್ತೇವೆ ಎಂದು ವಕೀಲ ಮಂಜುನಾಥ್ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.