ಬೆಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯ ಮಧ್ಯೆ ರಾಜ್ಯ ಸರ್ಕಾರದಿಂದ ರಚಿತವಾದ ವಿಶೇಷ ತನಿಖಾ ತಂಡದ (ಎಸ್ಐಟಿ) ಸದಸ್ಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರು ಅಮೆರಿಕಕ್ಕೆ ಪ್ರವಾಸ ಕೈಗೊಂಡಿದ್ದಾರೆ.
ಅಮೆರಿಕದಲ್ಲಿ ನಡೆಯುವ ಇಂಟೆಲಿಜೆಂಟ್ ಟ್ರಾನ್ಸ್ಪೋರ್ಟೇಷನ್ ಸೊಸೈಟಿ ಆಫ್ ಅಮೆರಿಕ ವಿಶ್ವ ಸಮ್ಮೇಳನ-2025ರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಜುಲೈ 16ರಂದು ರಾಜ್ಯ ಸರ್ಕಾರಕ್ಕೆ ಆಗಸ್ಟ್ 19ರಿಂದ 31ರವರೆಗೆ ವೇತನ ಸಹಿತ ರಜೆಗಾಗಿ ಅವರು ಮನವಿ ಮಾಡಿದ್ದರು
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಸೂಚನೆಯಂತೆ, ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿಯು ಆಗಸ್ಟ್ 1ರಂದು ಎಂ.ಎನ್. ಅನುಚೇತ್ ಅವರಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.
ಅದರಂತೆ, ಅನುಚೇತ್ ಅವರು ಆಗಸ್ಟ್ 18ರಂದು ಅಮೆರಿಕಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಗ್ರಾಮದ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ಜುಲೈ 20ರಂದು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.