ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರುತ್ತಿರುವ ದುಷ್ಟಶಕ್ತಿಗಳ ಷಡ್ಯಂತ್ರವನ್ನು ಖಂಡಿಸಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ, ಸಹಕಾರ ರತ್ನ ಎಂ.ಎನ್. ರಾಜೇಂದ್ರಕುಮಾರ್ ನೇತೃತ್ವದಲ್ಲಿ ಸೆ.14ರಂದು ʻಧರ್ಮ ಜಾಗೃತಿ ಯಾತ್ರೆ’ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕ, ಎಂದು ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯಾತ್ರೆಯಲ್ಲಿ 1500ಕ್ಕೂ ಅಧಿಕ ಸಹಕಾರಿ ಸಂಘಗಳು, 3000ಕ್ಕೂ ಅಧಿಕ ವಾಹನಗಳು ಭಾಗಿಯಾಗಲಿವೆ. ಸೆ.14ರಂದು ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಯಾತ್ರೆ ನಡೆಯಲಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಿಧದ ಸಹಕಾರಿ ಸಂಘಗಳ ಪದಾಧಿಕಾರಿಗಳು, ಸದಸ್ಯರು ಸೇರಿ 1500ಕ್ಕೂ ಅಧಿಕ ಮಂದಿ 3000ಕ್ಕೂ ಅಧಿಕ ವಾಹನಗಳಲ್ಲಿ ಉಜಿರೆಯಲ್ಲಿ ಒಟ್ಟುಸೇರಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ ನಡೆಸಲಿದ್ದಾರೆ. ಪವಿತ್ರ ಧರ್ಮಸ್ಥಳ ಕ್ಷೇತ್ರದ ಮೇಲೆ ವಿಶೇಷ ಗೌರವ, ಶ್ರದ್ಧಾ ಭಕ್ತಿಯನ್ನು ಸಹಕಾರ ಕ್ಷೇತ್ರ ಹೊಂದಿದೆ. ಹಾಗಾಗಿ, ಈ ಧರ್ಮ ಕ್ಷೇತ್ರಕ್ಕೆ ಅಪಚಾರವಾಗವೆಸಗುವವರಿಗೆ ಸ್ಪಷ್ಟ ಸಂದೇಶವನ್ನು ನೀಡುವ ಚಾರಿತ್ರಿಕ ಯಾತ್ರೆ ಇದಾಗಲಿದೆ ಎಂದು ಶಶಿಕುಮಾರ್ ರೈ ಬಾಲ್ಯೋಟ್ಟು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಸಹಕಾರ ಕ್ಷೇತ್ರಕ್ಕೆ ವಿಶೇಷ ಕೊಡುಗೆ ಲಭಿಸಿದೆ. ಸಹಕಾರ ಕ್ಷೇತ್ರ ಸರ್ವ ಧರ್ಮಕ್ಕೂ ಗೌರವ ನೀಡುವ ಕ್ಷೇತ್ರ ಆಗಿರುವುದರಿಂದ ಸರ್ವ ಧರ್ಮಗಳ ಸಂರಕ್ಷಣೆಯ ದೃಷ್ಟಿಯಿಂದ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಸಹಕಾರಿಗಳು ಈ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ಎಸ್. ಬಿ. ಜಯರಾಮ ರೈ, ಕೆ.ಜೈರಾಜ್ ಬಿ.ರೈ, ಎಸ್.ಎನ್. ಮನ್ಮಥ, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿಮೊದಲಾದವರು ಉಪಸ್ಥಿತರಿದ್ದರು.