ಬೆಂಗಳೂರು: ರಾಮನಗರ ತಾಲೂಕಿನ ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್ನಲ್ಲಿ ನಡೆಯುತ್ತಿರುವ ಕನ್ನಡದ ‘ಬಿಗ್ ಬಾಸ್ 12’ ರಿಯಾಲಿಟಿ ಶೋ ನಲ್ಲಿ ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಚಿತ್ರೀಕರಣ ವೇಳೆ ಬೀಗಮುದ್ರೆ ಹಾಕಿರುವ ಸರ್ಕಾರದ ಕ್ರಮ ಪ್ರಶ್ನಿಸಿ ‘ವಿಇಎಲ್ಎಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೇನ್ಮೆಂಟ್ ಪ್ರೈವೇಟ್ ಲಿಮಿಟೆಡ್’ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು(ಅ.8) ನಡೆಸಲಿದೆ.
ಬುಧವಾರ ಬೆಳಗ್ಗೆ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಹಾಜರಾದ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ದಿನದ ಎಲ್ಲ ಪ್ರಕರಣಗಳ ವಿಚಾರಣೆ ಮುಗಿದ ಬಳಿಕ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿತು.
ಅಕ್ಟೋಬರ್ 6ರಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದ್ದು, ಅದರ ಅನ್ವಯ ವಿಇಎಲ್ಎಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೇನ್ಮೆಂಟ್ಗೆ ಸೂಕ್ತ ಕಾಲಾವಕಾಶ ನೀಡದೇ ಅಕ್ಟೋಬರ್ 7ರಂದು ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್ಗೆ ರಾಮನಗರ ತಹಶೀಲ್ದಾರ್ ಬೀಗ ಹಾಕಿದ್ದಾರೆ. ಇದು ಕಾನೂನುಬಾಹಿರ ಮತ್ತು ಸ್ವೇಚ್ಛೆಯ ಕ್ರಮವಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್ನಲ್ಲಿ ದೇಶಾದ್ಯಂತ ಜನಪ್ರಿಯವಾಗಿರುವ ಬಿಗ್ ಬಾಸ್ ಕಾರ್ಯಕ್ರಮ ಸೇರಿ ಟಿವಿ ಕಾರ್ಯಕ್ರಮಗಳ ಚಿತ್ರೀಕರಣ ನಡೆಯುತ್ತದೆ. ಬಿಗ್ ಬಾಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಆಕ್ಷೇಪಾರ್ಹ ಆದೇಶ ಮಾಡಲಾಗಿದ್ದು, ಇದು ನಿರ್ದಿಷ್ಟ ಗುರಿ ಇಟ್ಟುಕೊಂಡು ಮಾಡಿರುವ ಆದೇಶವಾಗಿದೆ. ಇದು ಸಹಜ ನ್ಯಾಯತತ್ವಕ್ಕೆ ವಿರುದ್ಧವಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.
ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಎರಡು ಸಾವಿರಕ್ಕೂ ಅಧಿಕ ಮಂದಿ ಬದುಕು ಕಟ್ಟಿಕೊಂಡಿದ್ದು, ವಾಯು (ಮಾಲಿನ್ಯ ನಿಯಂತ್ರಣ ಮತ್ತು ನಿಷೇಧ) ಕಾಯ್ದೆಗೆ ವಿರುದ್ಧವಾಗಿ ನೋಟಿಸ್ ಜಾರಿ ಮಾಡಲಾಗಿದೆ. ವಿವಾದಿತ ಪ್ರದೇಶವು ಬಿಗ್ ಬಾಸ್ ಸ್ಪರ್ಧಿಗಳು ನೆಲೆಸುವ ತಾಣವಾಗಿದ್ದು, ಅದು ಕೈಗಾರಿಕೆಯಾಗುವುದಿಲ್ಲ. ಕಾಯ್ದೆಯ ಸೆಕ್ಷನ್ 2(ಡಿ) ಅಡಿ ಮನುಷ್ಯನ ಬದುಕಿಗೆ ಎರವಾಗುವ ಅಂಶ ಇರಬೇಕು. ಇದಕ್ಕೆ ಪ್ರಯೋಗಾಲಯದ ದತ್ತಾಂಶ/ಕ್ಲಿನಿಕಲ್ ಪರೀಕ್ಷೆ ಪೂರಕವಾಗಿರಬೇಕು. ಇಂಥ ಯಾವುದೇ ದತ್ತಾಂಶ ಇಲ್ಲದೆ ಕೇವಲ ಊಹೆಗಳ ಆಧಾರದಲ್ಲಿ ಆದೇಶ ಮಾಡಲಾಗಿದೆ. ಆದ್ದರಿಂದ, “ವಿಇಎಲ್ಎಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೇನ್ಮೆಂಟ್ ಪ್ರೈವೇಟ್ ಲಿಮಿಟೆಡ್” ಆಕ್ಷೇಪಾರ್ಹ ಆದೇಶ ರದ್ದುಪಡಿಸಬೇಕು ಎಂದು ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.