ಚಿತ್ರದುರ್ಗ: ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರಿಗೆ ಹೈಕೋರ್ಟ್ ₹2 ಲಕ್ಷ ರೂ. ದಂಡ ವಿಧಿಸಿದೆ.
ಕೋರ್ಟ್ ಬುಧವಾರ ನೀಡಿದ ಆದೇಶದ ಪ್ರಕಾರ, ದಂಡದ ಮೊತ್ತದಲ್ಲಿ ₹1 ಲಕ್ಷ ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ ಮತ್ತು ₹1 ಲಕ್ಷ ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ಪಾವತಿಸಬೇಕೆಂದು ನಿರ್ದೇಶಿಸಲಾಗಿದೆ.
ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಶರಣ್ ಪಂಪ್ವೆಲ್ ಅವರ ಜಿಲ್ಲೆ ಪ್ರವೇಶದ ಮೇಲೆ ನಿರ್ಬಂಧ ಹೇರಿತ್ತು. ಈ ನಿರ್ಬಂಧವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ನಂತರ ಕೋರ್ಟ್ ಕೆಲವು ಷರತ್ತುಗಳೊಂದಿಗೆ ನಿರ್ಬಂಧ ತೆರವುಗೊಳಿಸಿ, ಸೆಪ್ಟೆಂಬರ್ 13ರಂದು ಬೆಳಗ್ಗೆ 10:30ರಿಂದ ಮಧ್ಯಾಹ್ನ 12:30ರವರೆಗೆ ದರ್ಶನಕ್ಕೆ ಮಾತ್ರ ಅವಕಾಶ ನೀಡಿತ್ತು.
ಆದರೆ, ಪಂಪ್ವೆಲ್ ಅವರು 12:45ರವರೆಗೆ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದು, ಅಲ್ಲದೆ ಭಾಷಣ ಮಾಡಿದ ವಿಚಾರವೂ ಪೊಲೀಸರ ವರದಿಯ ಮೂಲಕ ಹೈಕೋರ್ಟ್ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಶರಣ್ ಪಂಪ್ವೆಲ್ ವಿರುದ್ಧ ₹2 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.