ಮಂಗಳೂರು: ಮಂಗಳೂರಿನ ಉರ್ವಾದ ಇಂಡೋರ್ ಸ್ಟೇಡಿಯಂನಲ್ಲಿ ಅಕ್ಟೋಬರ್ 27ರಿಂದ ನವೆಂಬರ್ 2ರವರೆಗೆ ರಾಜ್ಯದಲ್ಲೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಅಂತಾರಾಷ್ಟ್ರೀಯ ಚಾಲೆಂಜ್” ಎಂಬ ಹೆಸರಿನಲ್ಲಿ ನಡೆಯುವ ಈ ಕ್ರೀಡಾಕೂಟಕ್ಕೆ ಸುಮಾರು ₹2.5 ಕೋಟಿ ವೆಚ್ಚವಾಗಲಿದ್ದು, ಅದರಲ್ಲಿ ಮುಖ್ಯಮಂತ್ರಿ ₹1 ಕೋಟಿ ರೂ. ನೀಡಿದ್ದಾರೆ ಎಂದರು.
ಸುಮಾರು 400 ಕ್ರೀಡಾಪಟುಗಳು ಭಾಗವಹಿಸಲಿದ್ದು, ಅಕ್ಟೋಬರ್ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ದೇಶ-ವಿದೇಶಗಳ ಅನೇಕ ಕ್ರೀಡಾಪಟುಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಈ ಕ್ರೀಡಾಕೂಟದ ಮೂಲಕ ನಮ್ಮ ರಾಜ್ಯದ ಕ್ರೀಡಾಪಟುಗಳಿಗೆ ಉತ್ತೇಜನ ಸಿಗಲಿದೆ ಎಂದು ಗುಂಡೂರಾವ್ ಹೇಳಿದರು.
ಜಿಲ್ಲಾ ಬ್ಯಾಡ್ಮಿಂಟನ್ ಕ್ರೀಡಾಕೂಟದ ಅಧ್ಯಕ್ಷ ಸಂತೋಷ್ ಶೆಟ್ಟಿ ಮಾತನಾಡಿ, “ರಾಜ್ಯದಲ್ಲೇ ಮೊದಲ ಬಾರಿಗೆ ಇಂತಹ ಅಂತರರಾಷ್ಟ್ರೀಯ ಕ್ರೀಡಾಕೂಟ ಮಂಗಳೂರಿನಲ್ಲಿ ನಡೆಯುತ್ತಿರುವುದು ನಮ್ಮೆಲ್ಲರ ಹೆಮ್ಮೆಯ ವಿಚಾರ,” ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಮಂಜುನಾಥ ಭಂಡಾರಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಮಾಜಿ ಸಚಿವ ಅಭಯಚಂದ್ರ ಜೈನ್, ಸುಪ್ರೀತ್ ಆಳ್ವ, ಅಶೋಕ್, ಸ್ಟಾನಿ ಆಳ್ವಾರಿಸ್ ಮತ್ತಿತರರು ಉಪಸ್ಥಿತರಿದ್ದರು.