ತಿಮರೋಡಿ ಗಡೀಪಾರು ಆದೇಶ ಕಾನೂನು ಬದ್ಧ: ಸರಕಾರ ಸಮರ್ಥನೆ

ಬೆಂಗಳೂರು: ಸೌಜನ್ಯಾ ಸಾವಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಿ ಹೊರಡಿಸಿರುವ ಆದೇಶದಲ್ಲಿ ಕಾನೂನು ಪ್ರಕ್ರಿಯೆ ಲೋಪವೂ ಆಗಿಲ್ಲ; ಸಹಜ ನ್ಯಾಯ ತತ್ವದ ಉಲ್ಲಂಘನೆಯೂ ಆಗಿಲ್ಲ ಎಂದು ರಾಜ್ಯ ಸರಕಾರ ಸಮರ್ಥಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆ ಮಾನ್ವಿಗೆ ಗಡೀಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ತಾರಾನಾಥ ಪೂಜಾರಿ, ಗಡಿಪಾರು ಆದೇಶದಲ್ಲಿ ಒಂದಲ್ಲ, ಹತ್ತಾರು ಕಾನೂನು ಪ್ರಕ್ರಿಯೆಯ ಲೋಪಗಳಿವೆ. ಇಡೀ ಸರಕಾರ ಮತ್ತು ಗೃಹ ಇಲಾಖೆ ತಿಮರೋಡಿ ವಿರುದ್ಧ ನಿಂತಂತಿದೆ. ತಿಮರೋಡಿ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ಕುರಿತು ಯಾವುದೇ ವಿವರಗಳನ್ನು ಒದಗಿಸಲಾಗಿಲ್ಲ. ಈಗಾಗಲೇ ಸುಮಾರು 10 ಪ್ರಕರಣಗಳಲ್ಲಿ ಖುಲಾಸೆ ಆಗಿದ್ದು, ಎರಡು ಪ್ರಕರಣಗಳಲ್ಲಿ ಬಿ ರಿಪೋರ್ಟ್‌ ಸಲ್ಲಿಕೆಯಾಗಿದೆ. ಲೋಕಸಭೆ ಚುನಾವಣೆ ವೇಳೆ ಗಲಭೆ ಎಬ್ಬಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಸಾಕ್ಷಿ ಕೊಟ್ಟಿಲ್ಲ. ಇವರ ಹೆದರಿಕೆಯಿಂದ ಸಾಕ್ಷಿಗಳು ಮುಂದೆ ಬರುವುದಿಲ್ಲ ಎಂದೆಲ್ಲ ಹೇಳಲಾಗಿದೆ. ಆದರೆ ಇದೆಲ್ಲವೂ ಸುಳ್ಳು ಎಂದರು.

ಇದಕ್ಕೆ ಬಲವಾಗಿ ಆಕ್ಷೇಪಿಸಿದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ತಿಮರೋಡಿ ಪರ ವಕೀಲರು ನ್ಯಾಯಾಲಯಕ್ಕೆ ಹೇಳುತ್ತಿರುವ ವಿವರಗಳು ಸರಿಯಲ್ಲ. ಸ್ಥಳೀಯ ನಿವಾಸಿಯಾಗಿರುವ ಮಹೇಶ್‌ ಶೆಟ್ಟಿ ತಿಮರೋಡಿ ಸೌಜನ್ಯಾ ಚಳವಳಿ ಹೆಸರಲ್ಲಿ ಏನು ಮಾಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಸರಕಾರ ಸಹಜ ನ್ಯಾಯ ತತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಅಲ್ಲದೇ ಅವರನ್ನು ಗಡೀಪಾರು ಮಾಡಿ ಹೊರಡಿಸಿದ ಆದೇಶದಲ್ಲಿ ಕಾನೂನು ಪ್ರಕ್ರಿಯೆಯ ಯಾವ ಲೋಪವೂ ಆಗಿಲ್ಲ ಎಂದು ವಿವರಿಸಿದರು.

ಸುದೀರ್ಘ‌ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿತು. ಅಲ್ಲದೆ, ಗಡಿಪಾರು ಆದೇಶಕ್ಕೆ ಸಂಬಂಧಿಸಿದಂತೆ ತಿಮರೋಡಿ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಈ ಹಿಂದೆ ಹೊರಡಿಸಿದ್ದ ಮಧ್ಯಾಂತರ ಆದೇಶವನ್ನು ವಿಸ್ತರಿಸಿತು.

error: Content is protected !!