ಬೆಂಗಳೂರು: ಅಕ್ರಮವಾಗಿ ಪಿಸ್ತೂಲ್ ಇಟ್ಟುಕೊಂಡು ದರೋಡೆ ಎಸೆಗಲು ಸಂಚು ರೂಪಿಸಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬನ್ನೇರುಘಟ್ಟ ರಸ್ತೆಯ ಗುರಪ್ಪನಪಾಳ್ಯ ನಿವಾಸಿ ರೋಷನ್ ಅಹಮ್ಮದ್ (30) ಬಂಧಿತ ಆರೋಪಿ.
ಆರೋಪಿ ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದು, ದಂದೆಯನ್ನು ಸುಸೂತ್ರವಾಗಿ ನಡೆಸಲು ಹಾಗೂ ತನ್ನ ವಿರೋಧಿಗಳನ್ನು ಹೆದರಿಸಲು ಅಕ್ರಮವಾಗಿ ಪಿಸ್ತೂಲ್ ಮತ್ತು ಜೀವಂತ ಗುಂಡುಗಳನ್ನು ಖರೀದಿಸಿದ್ದಾನೆ ಎಂಬುದು ಗೊತ್ತಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.

ಅ.23ರಂದು ಸಂಜೆ ಆರೋಪಿ ರೋಷನ್ ಸುದ್ದಗುಂಟೆಪಾಳ್ಯದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಪಕ್ಕದ ಖಾಲಿ ಜಾಗದಲ್ಲಿ ದುಷ್ಕೃತ್ಯ ಎಸೆಗಲು ಹೊಂಚು ಹಾಕಿ ಕುಳಿತ್ತಿದ್ದ. ಈ ಬಗ್ಗೆ ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಆರೋಪಿ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.