ನಾಳೆ ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ: ಡಾ। ಎಂ.ಎನ್. ರಾಜೇಂದ್ರ ಕುಮಾ‌ರ್

ಮಂಗಳೂರು: 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ಧೈಯವಾಕ್ಯದೊಂದಿಗೆ ಈ ಬಾರಿ ಆಚರಿಸಲಾಗುತ್ತಿದೆ. ಅದೇ ರೀತಿಯಾಗಿ 7 ದಿನಗಳ ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಬಗ್ಗೆಯೂ ಚಿಂತನ-ಮಂಥನ ನಡೆಯುತ್ತಿದೆ. ನಾಳೆ ಮಂಗಳೂರಿನಲ್ಲಿ ನಡೆಯುವ ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ “ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು” ಎಂಬ ವಿಷಯದ ಬಗ್ಗೆ ಕಾರ್ಯಕ್ರಮ ನಡೆಯಲಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ। ಎಂ.ಎನ್. ರಾಜೇಂದ್ರ ಕುಮಾ‌ರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.


“ಸಹಕಾರ ವ್ಯವಸ್ಥೆಯ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವ ಪ್ರಯತ್ನ ಸಹಕಾರ ಸಪ್ತಾಹ ಆಚರಣೆಯಲ್ಲಿ ನಡೆಯುತ್ತಿದೆ. ರಾಷ್ಟ್ರ ಮತ್ತು ರಾಜ್ಯ ಸರಕಾರಗಳು ಸಹಕಾರ ಚಳುವಳಿಯ ಬೆಳವಣಿಗೆಗೆ ವಿಶೇಷ ಪ್ರೋತ್ಸಾಹವನ್ನು ನೀಡುತ್ತಿದ್ದು, ಈ ಸಹಕಾರ ಸಪ್ತಾಹ ವೈವಿಧ್ಯಮಯ ಚಟುವಟಿಕೆಯ ಮೂಲಕ ಗುರುತಿಸಿಕೊಂಡಿದೆ. ಈ ಬಾರಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್. ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು. ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.) ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ಧ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ“ ಎಂದು ಹೇಳಿದರು.

ಸಹಕಾರ ಸಪ್ತಾಹಕ್ಕೆ ವಸ್ತು ಪ್ರದರ್ಶನ ಮತ್ತು ಬೃಹತ್ ಸಹಕಾರ ಮೆರವಣಿಗೆ ಮೆರುಗು ನೀಡಲಿದೆ. ಇದಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದ್ದು, ಮುಂಭಾಗದಲ್ಲಿ ಸಹಕಾರಿ ಬಂಧುಗಳು ಆಸೀನರಾಗಲು ವಿಶಾಲವಾದ ಚಪ್ಪರವನ್ನು ಹಾಕಲಾಗಿದೆ. ಪ್ರಥಮ ಹಂತದಲ್ಲಿ ಅತಿಥಿಗಳು ಹಾಗೂ ಮಾಧ್ಯಮದ ಬಂಧುಗಳಿಗೆ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ. ಭದ್ರತೆಯ ದೃಷ್ಟಿಯಿಂದಾಗಿ ನಾನಾ ಹಂತಗಳಲ್ಲಿ ಆಸನವನ್ನು ವಿಭಜಿಸಲಾಗಿದೆ. ಸಭಾಂಗಣವಿಡೀ ತಂಪಾಗಿರಿಸಲು ಬೃಹತ್ ಗಾತ್ರದ ಫ್ಯಾನ್ ಗಳನ್ನು ಜೋಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಕರ್ಷಕ ಮೆರವಣಿಗೆ:
ಸಹಕಾರ ಸಪ್ತಾಹವನ್ನು ಅತ್ಯಂತ ಆಕರ್ಷಕ ರೀತಿಯಲ್ಲಿ ನಡೆಸುವ ಉದ್ದೇಶದಿಂದ ನಾಳೆ ಬೆಳಿಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆವರಣದಿಂದ ಕರುನಾಡಿನ ವೈವಿಧ್ಯತೆಯನ್ನೊಳಗೊಂಡ ಸಹಕಾರ ಮೆರವಣಿಗೆ ನಡೆಯಲಿದೆ. ಈ ಸಹಕಾರ ಮೆರವಣಿಗೆಯಲ್ಲಿ ಸಹಕಾರ ಬಂಧುಗಳು ಹಾಗೂ ಸ್ವ-ಸಹಾಯ ಗುಂಪಿನ ಸದಸ್ಯರು ಸೇರಿ ಸುಮಾರು 15.000 ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಈ ಸಹಕಾರ ಮೆರವಣಿಗೆಯಲ್ಲಿ ಸುಮಾರು 50ಕ್ಕೂ ಹೆಚ್ಚಿನ ಟ್ಯಾಬ್ಲೊಗಳು ಭಾಗವಹಿಸಲಿದೆ.

ಸಹಕಾರ ರಥ, ಘಟೋತ್ಕಜ, ಚೆಂಡೆ. ಕೊಂಬು. ಸಹಕಾರಿ ಬಣ್ಣದ ಕೊಡೆಗಳು, ಭುವನೇಶ್ವರಿ ದೇವಿಯ ಸ್ತಬ್ಧಚಿತ್ರ, ಪುರುಷರ ಹಾಗೂ ಮಹಿಳೆಯರ ಡೊಳ್ಳು ಕುಣಿತ, ಮೊಳಹಳ್ಳಿ ಶಿವರಾವ್ ಸ್ತಬ್ಧಚಿತ್ರ, ಮಹಿಳೆಯರ ವೀರಗಾಸೆ, ಹೈನುಗಾರಿಕೆಯ ಸ್ತಬ್ಧಚಿತ್ರ. ಮೀನುಗಾರಿಕೆಯ ಸ್ತಬ್ಧಚಿತ್ರ. ಹೊನ್ನಾವರ ಬ್ಯಾಂಡ್. ಕೆ.ಎಂ.ಎಫ್. – ನಂದಿನಿ ಆನ್ ವೀಲ್ ಸ್ತಬ್ಧಚಿತ್ರ, ಸುಗ್ಗಿ ಕುಣಿತ, ತುಳುನಾಡು ವೈಭವ ಸ್ತಬ್ಧಚಿತ್ರ. ನವೋದಯ ಪ್ರಚಾರ ವಾಹನ, ಪುರವಂತಿಗೆ. ಗ್ರಾಮೀಣ ಬ್ಯಾಂಕಿಂಗ್ ಚಟುವಟಿಕೆಯ ಸ್ತಬ್ಧಚಿತ್ರ. ಚೆಂಡೆ ವಾಹನ, ಸೋಮನ ಕುಣಿತ, ಪಟ್ಟದ ಕುಣಿತ, ಶಿವನ ಮೂರ್ತಿಯ ಸ್ತಬ್ಧಚಿತ್ರ, ನವೋದಯ ಗುಂಪಿನ ಸಭೆ ನಡೆಸುವ ಸ್ತಬ್ಧಚಿತ್ರ, ಗೊರವರ ಕುಣಿತ, ಪ್ರಾಥಮಿಕ ಪತ್ತಿನ ಸಂಘದ ಸ್ತಬ್ಧಚಿತ್ರ, ಕೃಷಿ ಚಟುವಟಿಕೆಯ ಸ್ತಬ್ಧಚಿತ್ರ. ಉಳುಮೆ ಮಾಡುವ ರೈತನ ಸ್ತಬ್ಧಚಿತ್ರ. ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮೊಬೈಲ್ ಬ್ಯಾಂಕ್ ವಾಹನ ಸೇರಿದಂತೆ 50 ಕ್ಕೂ ಅಧಿಕ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಸಹಕಾರ ಮಾಣಿಕ್ಯ ಪ್ರಶಸ್ತಿ:
ಈಗಾಗಲೇ “ಸಹಕಾರ ಮಾಣಿಕ್ಯ ಪ್ರಶಸ್ತಿ”ಯನ್ನು 3 ಸಹಕಾರ ಸಂಸ್ಥೆಗಳಿಗೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಲಾ 1 ಉತ್ತಮ ಕೃಷಿಪತ್ತಿನ ಸಹಕಾರಿ ಸಂಘಗಳನ್ನು ಹಾಗೂ 1 ಪತ್ತಿನ ಸಹಕಾರಿ ಸಂಘವನ್ನು 2025ನೇ ಸಾಲಿನ “ಸಹಕಾರ ಮಾಣಿಕ್ಯ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯ ಜೊತೆಗೆ 5 ಗ್ರಾಂ ಚಿನ್ನದ ಪದಕ. ರೂ.10,000 ನಗದು ಹಾಗೂ ಪಾರಿತೋಷಕವನ್ನು ನೀಡಲಾಗುವುದು. ಸಾಮಾನ್ಯ ವಿಭಾಗದಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಉಭಯ ಜಿಲ್ಲೆಗಳಲ್ಲಿ ಒಂದರಂತೆ ಹಾಗೂ ಹೈನುಗಾರಿಕೆ ಕ್ರೆಡಿಟ್ ಸೊಸೈಟಿ, ಮೀನುಗಾರಿಕಾ ಸಹಕಾರಿ ಸಂಘ, ಸೌಹಾರ್ಧ ಸಹಕಾರಿ ಸಂಘ ಹಾಗೂ ಮಹಿಳಾ ಸಹಕಾರಿ ಸಂಘಕ್ಕೆ ಉಭಯ ಜಿಲ್ಲೆಗಳಿಂದ 1 ಹಾಗೂ ವಜ್ರ ಮಹೋತ್ಸವ ಮತ್ತು ಸುವರ್ಣ ಮಹೋತ್ಸವ ಪೂರೈಸಿದ ಸಂಘಗಳನ್ನು ಗೌರವಿಸಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ವಿನಯ್ ಕುಮಾರ್ ಸೂರಿಂಜೆ, ಹೆಚ್ ಎಂ ರಮೇಶ್, ರವಿರಾಜ್ ಹೆಗ್ಡೆ, ರವೀಂದ್ರ ಕಂಬಳಿ, ಸದಾಶಿವ ಉಳ್ಳಾಲ್, ಐಕಳ ಭಾವ ದೇವಿಪ್ರಸಾದ್ ಶೆಟ್ಟಿ, ಜಯರಾಜ್, ಮೋನಪ್ಪ ಎಕ್ಕಾರ್, ಭಾಸ್ಕರ್ ಕೋಟ್ಯಾನ್, ಗೋಪಿನಾಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!