ಹೊಸದಿಲ್ಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಕೊಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಇಂಡಿಯಾ ಗೇಟ್ ಆವರಣದಲ್ಲಿ ಸಂತ್ರಸ್ತೆ, ಆಕೆಯ ತಾಯಿ ಮತ್ತು ಮಹಿಳಾ ಕಾರ್ಯಕರ್ತೆ ಯೋಗಿತಾ ಭಯನಾ ಮಂಗಳವಾರ(ಡಿ.23) ಪ್ರತಿಭಟನೆ ನಡೆಸಿದರು. ಬಳಿಕ ದೆಹಲಿ ಪೊಲೀಸರು ಪ್ರತಿಭಟನೆಯನ್ನು ಬಲವಂತವಾಗಿ ನಿಗ್ರಹಿಸಿ, ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಪ್ರತಿಭಟನೆಯ ಸಮಯದಲ್ಲಿ ಮಾತನಾಡಿದ ಸಂತ್ರಸ್ತೆ, “ಮುಂಬರುವ ಉತ್ತರ ಪ್ರದೇಶ ಚುನಾವಣೆಗಳ ಹಿನ್ನೆಲೆಯಲ್ಲಿ ಸೆಂಗರ್ಗೆ ಜಾಮೀನು ನೀಡಲಾಗಿದೆ. ಅತ್ಯಾಚಾರ ಆರೋಪಿ ಬಿಡುಗಡೆಯಿಂದ ತಮ್ಮ ಹಾಗೂ ಕುಟುಂಬದ ಸುರಕ್ಷತೆಗೆ ಅಪಾಯಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಈ ಜಾಮೀನು ಆದೇಶವನ್ನು ತಕ್ಷಣ ರದ್ದುಗೊಳಿಸಬೇಕು” ಎಂದು ಒತ್ತಾಯಿಸಿ, ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತೆ ಯೋಗಿತಾ ಭಯನಾ, ಸಂತ್ರಸ್ತೆ ಕುಟುಂಬವು ಹಲವು ವರ್ಷಗಳಿಂದ ಭಯದಿಂದ ಬದುಕುತ್ತಿದೆ, ಈಗ ಆರೋಪಿಗೆ ಜಾಮೀನು ದೊರೆತ ಬಳಿಕ ಕುಟುಂಬಕ್ಕೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಆ ವೇಳೆ ಮಾತನಾಡಿದ ಸಂತ್ರಸ್ತೆಯ ಸಹೋದರಿಯೂ, ಸೆಂಗಾರ್ ಬಿಡುಗಡೆಗೊಂಡಿರುವುದರಿಂದ ತಮ್ಮ ಕುಟುಂಬದ ಜೀವಕ್ಕೆ ಅಪಾಯವಿದೆ ಎಂದು ಹೇಳಿದರು.
ಈ ತೀರ್ಪಿನ ವಿರುದ್ಧ ಸಿಬಿಐ ನ್ಯಾಯಾಲಯದಲ್ಲಿ ಮೇಲ್ಮನವಿ ಬಾಕಿ ಇರುವುದರಿಂದ, ಹೈಕೋರ್ಟ್ನ ವಿಭಾಗೀಯ ಪೀಠವು ಸೆಂಗರ್ ಮೇಲೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, 15 ಲಕ್ಷ ರೂಪಾಯಿ ಜಾಮೀನು ಬಾಂಡ್ನ ಷರತ್ತಿನ ಮೇರೆಗೆ ಅವರಿಗೆ ಜಾಮೀನು ನೀಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ದೊರೆತಿರುವ ಸೆಂಗರ್, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ವಿಧಿಸಲಾದ 10 ವರ್ಷಗಳ ಶಿಕ್ಷೆಯ ಹಿನ್ನೆಲೆಯಲ್ಲಿ ಕಸ್ಟಡಿಯಲ್ಲಿಯೇ ಇರುವುದಾಗಿ ತಿಳಿದುಬಂದಿದೆ.