ಮಂಗಳೂರು: ನಗರದ ಯೆಯ್ಯಾಡಿ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಅತೀ ಶೀಘ್ರದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಲಿಗೆ ಮಾಡಲಾಗಿದ್ದ 32 ಗ್ರಾಂ ತೂಕದ, ಅಂದಾಜು 3.50 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯನ್ನು ರೋಹಿತ್ ಬಿ. ದಾಸ್ (24) ಎಂದು ಗುರುತಿಸಲಾಗಿದ್ದು, ಈತ ಬಂಟ್ವಾಳ ತಾಲೂಕು ಕಕ್ಕೆಪದವು ಗ್ರಾಮದ ನಿವಾಸಿ. ತನಿಖೆಯಲ್ಲಿ ಆರೋಪಿಯು ಸ್ವಿಗ್ಗಿ ಹಾಗೂ ಝೋಮೆಟೋ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಸ್ಕೂಟರ್ ಖರೀದಿ ಸೇರಿದಂತೆ ವಿವಿಧ ಕಾರಣಗಳಿಗೆ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಚೈನ್ಸ್ನಾಚಿಂಗ್ ಕೃತ್ಯ ಎಸಗಿರುವುದು ತಿಳಿದುಬಂದಿದೆ.
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಡಿಸೆಂಬರ್ 25, 2025ರಂದು ಸಂಜೆ ಗುರುನಗರ ನಿವಾಸಿ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿರುವ ಅಂಗಡಿಯಿಂದ ಮನೆಗೆ ನಡೆದುಕೊಂಡು ಬರುತ್ತಿದ್ದ ವೇಳೆ, ಶಂಕರಭವನ ಹೊಟೇಲ್ ಬಳಿಯ ಕೊಪ್ಪಳಕಾಡು ರಸ್ತೆಯಲ್ಲಿ ಸಂಜೆ ಸುಮಾರು 6.30ರ ವೇಳೆಗೆ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಕುರಿತು ಅದೇ ದಿನ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 128/2025 ಕಲಂ 304(2) ಭಾರತೀಯ ನ್ಯಾಯ ಸಂಹಿತೆ–2023ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕರಾದ ಗವಿರಾಜ್ ಹಾಗೂ ಅರುಣ್ ಕುಮಾರ್, ಪಿಎಸ್ಐ ಹಾಗೂ ಠಾಣೆಯ ಕ್ರೈಂ ಸಿಬ್ಬಂದಿ, ದಕ್ಷಿಣ ಉಪವಿಭಾಗದ ಎಸಿಪಿ ಕ್ರೈಂ ಸಿಬ್ಬಂದಿಯ ಸಂಯುಕ್ತ ತಂಡ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ನಡೆಸಿ, ಡಿಸೆಂಬರ್ 28ರಂದು ಬೆಳಿಗ್ಗೆ ಸುಮಾರು 9.30ರ ವೇಳೆಗೆ ಬಂಟ್ವಾಳ ತಾಲೂಕು ಕುಕ್ಕೆಪದವು ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಸುಲಿಗೆ ಮಾಡಿದ್ದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ.
2025ನೇ ಸಾಲಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 7 ಸರಗಳ್ಳತನ ಪ್ರಕರಣಗಳು ವರದಿಯಾಗಿದ್ದು, ಈ ಎಲ್ಲ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.