ಶಬರಿಮಲೆ ಭಕ್ತರ ಕಾರು ಭೀಕರ ಅಪಘಾತ; ನಾಲ್ವರು ಸಾವು

ತುಮಕೂರು: ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸಾಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮೂಲದ ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಈ ದುರ್ಘಟನೆಯಲ್ಲಿ ಪ್ರಶಾಂತ್, ಪ್ರವೀಣ್ ಕುಮಾರ್, ರಾಜಪ್ಪ, ಉಲಗಪ್ಪ, ರಾಕೇಶ್, ತಿರುಪತಿ ಹಾಗೂ ಶ್ರೀನಿವಾಸ್ ಸೇರಿ ಏಳು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

“ಜನವರಿ 5ರಂದು ಎಲ್ಲರೂ ಒಟ್ಟಾಗಿ ಮಾಲೆ ಹಾಕಿ ಶಬರಿಮಲೆಗೆ ತೆರಳಿದ್ದೆವು. ಮಗಳು ನನ್ನ ಪಕ್ಕದಲ್ಲೇ ಮಲಗಿದ್ದಳು. ಏನು ನಡೆಯಿತು ಗೊತ್ತಾಗಲೇ ಇಲ್ಲ,” ಎಂದು ಅಪಘಾತದಲ್ಲಿ ಏಳು ವರ್ಷದ ಮಗಳನ್ನು ಕಳೆದುಕೊಂಡ ತಂದೆ ಉಲಗಪ್ಪ ಕಣ್ಣೀರಿಟ್ಟಿದ್ದಾರೆ. ಮೊದಲ ತರಗತಿಯಲ್ಲಿ ಓದುತ್ತಿದ್ದ ಮಗಳನ್ನು ಎರಡನೇ ಬಾರಿ ಅಯ್ಯಪ್ಪ ದರ್ಶನಕ್ಕೆ ಕರೆದುಕೊಂಡು ಹೋಗಿದ್ದೆವು ಎಂದು ಅವರು ನೋವು ಹಂಚಿಕೊಂಡಿದ್ದಾರೆ.

ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೂಸರ್‌ನಲ್ಲಿ ಒಟ್ಟು 11ರಿಂದ 12 ಮಂದಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

error: Content is protected !!