ಮಂಗಳೂರು: ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಮನೆಬಾಗಿಲಲ್ಲೇ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಸಂಚಾರಿ ಆರೋಗ್ಯ ಘಟಕ ವಾಹನಗಳಿಗೆ ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಐದು ಹಾಗೂ ಉಡುಪಿ ಜಿಲ್ಲೆಯ ನಾಲ್ಕು ಸಂಚಾರಿ ಆರೋಗ್ಯ ಘಟಕ ವಾಹನಗಳಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ರಾಜ್ಯಾದ್ಯಂತ ಒಟ್ಟು 81 ಸಂಚಾರಿ ಆರೋಗ್ಯ ಘಟಕಗಳನ್ನು ಆರಂಭಿಸಲಾಗಿದೆ. ಇದು ಸರ್ಕಾರದ ಜನಪರ ಯೋಜನೆಯ ಭಾಗವಾಗಿದ್ದು, ಸಂಪರ್ಕ ರಹಿತ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಈ ‘ಆರೋಗ್ಯ ಸೇತು’ ವಾಹನಗಳು ತೆರಳಿ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಲಿವೆ ಎಂದು ತಿಳಿಸಿದರು.

ಪ್ರತಿ ಸಂಚಾರಿ ಆರೋಗ್ಯ ಘಟಕದಲ್ಲಿ ಒಬ್ಬ ವೈದ್ಯರು, ಒಬ್ಬ ನರ್ಸ್ ಹಾಗೂ ಒಬ್ಬ ಲ್ಯಾಬ್ ಟೆಕ್ನಿಷಿಯನ್ ಕಾರ್ಯನಿರ್ವಹಿಸಲಿದ್ದು, ಅಗತ್ಯ ಔಷಧಿಗಳು, ವೈದ್ಯಕೀಯ ಸಲಕರಣೆಗಳು ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆಗೆ ಬೇಕಾದ ಜೀವ ರಕ್ಷಕ ಔಷಧಿಗಳನ್ನು ವಾಹನದಲ್ಲಿ ಸಜ್ಜುಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.

ಸ್ಥಳೀಯ ಜನರಿಗೆ ಮುಂಗಡವಾಗಿ ಮಾಹಿತಿ ನೀಡಿ ನಿಗದಿತ ವೇಳಾಪಟ್ಟಿಯಂತೆ ಸಂಚಾರಿ ಆರೋಗ್ಯ ಸೇವೆಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನಾಯಕ ನರ್ವಡೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆ ಅಧೀಕ್ಷಕ ಡಾ. ಶಿವಪ್ರಕಾಶ್, ಲೇಡಿಘೋಷನ್ ಆಸ್ಪತ್ರೆ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
