ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಎರ್ಲಪಾಡಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್ನ ಕಾಮಗಾರಿ ಸಂಪೂರ್ಣವಾಗಿ ಮುಗಿದು ಅಧಿಕೃತ ಹಸ್ತಾಂತರವಾಗುವವರೆಗೆ ಅದರ ಸ್ವಚ್ಛತೆ, ನಿರ್ವಹಣೆ ಹಾಗೂ ಭದ್ರತೆಯ ಸಂಪೂರ್ಣ ಜವಾಬ್ದಾರಿಯನ್ನು ಅನುಷ್ಠಾನ ಸಂಸ್ಥೆಯಾದ ಉಡುಪಿ ನಿರ್ಮಿತಿ ಕೇಂದ್ರವೇ ವಹಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಆದೇಶಿಸಿದ್ದಾರೆ.

ಥೀಮ್ ಪಾರ್ಕ್ ಯೋಜನೆ ಪೂರ್ಣಗೊಂಡು ಹಸ್ತಾಂತರವಾಗುವವರೆಗೆ ಆವರಣದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಸ್ಥಳದಲ್ಲಿರುವ ಬೆಲೆಬಾಳುವ ಎಲೆಕ್ಟ್ರಾನಿಕ್ ಉಪಕರಣಗಳು, ನಿರ್ಮಾಣ ಸಾಮಗ್ರಿಗಳು ಹಾಗೂ ಇತರ ಆಸ್ತಿಗಳನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಪ್ರಮುಖ ನಿರ್ದೇಶನಗಳು:
-
ಥೀಮ್ ಪಾರ್ಕ್ ಆವರಣದಲ್ಲಿ ಬೆಳೆದಿರುವ ಕಳೆಗಿಡಗಳನ್ನು ತೆರವುಗೊಳಿಸಿ, ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು.
-
ತಕ್ಷಣವೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, 24×7 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು.
-
ಸಾರ್ವಜನಿಕರು ಸೇರಿದಂತೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೇವಲ ಅಧಿಕೃತ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು.
-
ಅತಿಕ್ರಮ ಪ್ರವೇಶ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಿಸಲು ಅಥವಾ ಕಾನೂನು ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
-
ಪಾರ್ಕ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ವಹಿಸಬೇಕು.
ನಿರ್ಮಿತಿ ಕೇಂದ್ರದ ಅಧಿಕಾರಿಗಳು ಪ್ರತಿ ವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸ್ವಚ್ಛತೆ ಹಾಗೂ ನಿರ್ವಹಣೆಯ ಬಗ್ಗೆ ಜಿಪಿಎಸ್ ಟ್ಯಾಗ್ ಮಾಡಿದ ಫೋಟೋಗಳೊಂದಿಗೆ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಈ ಎಲ್ಲಾ ಕ್ರಮಗಳ ಕುರಿತು ಕೈಗೊಂಡ ಕ್ರಮಗಳ ವಿವರವಾದ ವರದಿಯನ್ನು ಜನವರಿ 10ರೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.