ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ಸಾಧ್ಯ – ‌ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್

ಸುರತ್ಕಲ್: ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸಾಧ್ಯವಿದ್ದು, ದೇಶದ ಆರ್ಥಿಕತೆಗೆ ಸಂಘ ಸಂಸ್ಥೆಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್ ಹೇಳಿದರು.

ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಆಶ್ರಯದಲ್ಲಿ, ಶ್ರೀನಿವಾಸ್ ಕಾಲೇಜು ಸಮೂಹ ವಿದ್ಯಾ ಸಂಸ್ಥೆ ಮುಕ್ಕ, ಸುರತ್ಕಲ್ ಪೊಲೀಸ್ ಠಾಣೆ ಹಾಗೂ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಜಂಟಿ ಸಹಯೋಗದಲ್ಲಿ ಮುಕ್ಕದಿಂದ ಬೈಕಂಪಾಡಿಯ ತನಕದ ರಾಷ್ಟ್ರೀಯ ಹೆದ್ದಾರಿ ಹಾಗೂ ಬಸ್ ತಂಗುದಾಣಗಳಲ್ಲಿ ಹಮ್ಮಿಕೊಳ್ಳಲಾದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ “ಸ್ವಚ್ಛ ಸುರತ್ಕಲ್” ನಿರ್ಮಾಣಕ್ಕೆ ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಇತರ ಸಂಸ್ಥೆಗಳನ್ನು ಜೊತೆಗೂಡಿಸಿಕೊಂಡು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿ ಸುರತ್ಕಲ್ ವ್ಯಾಪ್ತಿಯ ಎಲ್ಲಾ ಬಸ್ ತಂಗುದಾಣಗಳನ್ನು ಸ್ವಚ್ಛಗೊಳಿಸಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭ ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ, ಕಾರ್ಯದರ್ಶಿ ಕಿರಣ್ ಆಚಾರ್ಯ, ಶ್ರೀನಿವಾಸ್ ಕಾಲೇಜಿನ ಪ್ರೋ. ಆನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!