ಉಳ್ಳಾಲ ದರ್ಗಾ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ದರ್ಗಾ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಕಾಮೆಂಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸೋಮವಾರ(ಫೆ.02) ಬೆಳಿಗ್ಗೆ 11.00 ಗಂಟೆ ಸುಮಾರಿಗೆ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಕರ್ತವ್ಯದಲ್ಲಿದ್ದ ವೇಳೆ ಇನ್‌ಸ್ಟಾಗ್ರಾಂನಲ್ಲಿ “shankar11916” ಎಂಬ ಖಾತೆಯಿಂದ “Support maadi bro, Ullal masjid hatra bomb blast madtini” (ಉಳ್ಳಾಲ ದರ್ಗಾ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡುತ್ತೇನೆ, ಸಪೋರ್ಟ್ ಮಾಡಿ) ಎಂದು ಕಾಮೆಂಟ್ ಮಾಡಿರುವುದು ಗಮನಕ್ಕೆ ಬಂದಿದೆ.ಈ ಕಾಮೆಂಟ್ ಧರ್ಮಗಳ ಮಧ್ಯೆ ವೈಮನಸ್ಸು ಉಂಟುಮಾಡುವ, ಹಿಂಸೆಗೆ ಪ್ರಚೋದನೆ ನೀಡುವ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸುವ ಉದ್ದೇಶ ಹೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಸಂಬಂಧ ಮಂಗಳೂರು ನಗರ ನಿವಾಸಿ, ಪ್ರಾಪ್ತವಯಸ್ಕ ಪುರುಷನಾದ ಇನ್‌ಸ್ಟಾಗ್ರಾಂ ಖಾತೆದಾರನನ್ನು(A1) ಆರೋಪಿಯಾಗಿ ದಾಖಲಿಸಲಾಗಿದೆ. ಪೊಲೀಸರು ದೂರನ್ನು ದಾಖಲಿಸಿಕೊಂಡು, ಕಾನೂನು ಕ್ರಮ ಕೈಗೊಂಡಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ. ಪ್ರಕರಣದ ಪ್ರಥಮ ವರದಿ ನ್ಯಾಯಾಲಯಕ್ಕೆ ಸೋಮವಾರದಂದು ಮಧ್ಯಾಹ್ನ 2.30 ಗಂಟೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹಾಗೂ ಬೆದರಿಕೆ ಸಂದೇಶಗಳನ್ನು ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

error: Content is protected !!