ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಕುರಿತು ಸಮಗ್ರ ವಿಶ್ಲೇಷಣೆ ನಡೆಸಿರುವ ಅವರು, ಇದು ಕೇವಲ ಅಂಕಿ-ಅಂಶಗಳ ಬಜೆಟ್ ಆಗಿರದೆ, ದೂರದೃಷ್ಟಿಯ ‘ಅಭಿವೃದ್ಧಿ ಪತ್ರ’ವಾಗಿದೆ ಎಂದು ಬಣ್ಣಿಸಿದ್ದಾರೆ.

ಕರಾವಳಿ ಅಭಿವೃದ್ಧಿಗೆ ಹೊಸ ಆಯಾಮ:
ಬಜೆಟ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಗೆ ಪೂರಕವಾದ ಅಂಶಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಮೀನುಗಾರಿಕೆ ಜಿಲ್ಲೆಯ ಪ್ರಮುಖ ಆರ್ಥಿಕ ಮೂಲವಾಗಿದ್ದು ಇಲ್ಲಿ ಅತ್ಯಾಧುನಿಕ ‘ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪಿಸಲು ಮುಂದಾಗಿರುವುದು ಸ್ವಾಗತಾರ್ಹ. ಇದು ಮೀನುಗಾರರಿಗೆ ಆಧುನಿಕ ತಂತ್ರಜ್ಞಾನದ ನೆರವು ನೀಡಲಿದೆ. ಕರಾವಳಿ ಪ್ರವಾಸೋದ್ಯಮಕ್ಕೆ ವೇಗ ನೀಡಲು ‘ಸೀ ಪ್ಲೇನ್’ ಮತ್ತು ‘ಹೆಲಿ ಟ್ಯಾಕ್ಸಿ’ಗಳಂತಹ ಆಧುನಿಕ ಸಾರಿಗೆ ಸೌಲಭ್ಯಗಳನ್ನು ಘೋಷಿಸಿರುವುದು ಜಾಗತಿಕ ಮಟ್ಟದಲ್ಲಿ ಮಂಗಳೂರನ್ನು ಪ್ರವಾಸಿ ತಾಣವಾಗಿ ಗುರುತಿಸಲು ಸಹಕಾರಿಯಾಗಲಿದೆ“ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಆಯಕಟ್ಟಿನ ಪ್ರದೇಶಗಳಾದ ಮಾಣಿ ಮತ್ತು ಸಜಿಪನಡುವಿನಲ್ಲಿ ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಸರ್ಕಾರದ ನಿರ್ಧಾರವು ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲಿದೆ,
“ಬಂಟ್ವಾಳ ತಾಲ್ಲೂಕಿನ ಮಾಣಿ ಮತ್ತು ಸಜಿಪನಡು ಪ್ರದೇಶಗಳು ಭೌಗೋಳಿಕವಾಗಿ ಮತ್ತು ಆಡಳಿತಾತ್ಮಕವಾಗಿ ಅತ್ಯಂತ ಪ್ರಮುಖ ಕೇಂದ್ರಗಳಾಗಿವೆ. ಇಲ್ಲಿ ಹೊಸ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಬೇಕೆಂಬುದು ದೀರ್ಘಕಾಲದ ಬೇಡಿಕೆಯಾಗಿತ್ತು. ಈ ಭಾಗಗಳಲ್ಲಿ ಠಾಣೆಗಳು ಅಸ್ತಿತ್ವಕ್ಕೆ ಬರುವುದರಿಂದ ಸಾರ್ವಜನಿಕರಿಗೆ ಕಾನೂನು ನೆರವು ತಕ್ಷಣವೇ ದೊರೆಯಲಿದೆ ಮತ್ತು ಅಪರಾಧ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲು ಸಾಧ್ಯವಾಗಲಿದೆ,” ಎಂದು ಭಂಡಾರಿ ಅವರು ಶ್ಲಾಘಿಸಿದ್ದಾರೆ.
ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ:
ಶಿಕ್ಷಣ ತಜ್ಞರೂ ಆಗಿರುವ ಡಾ.ಮಂಜುನಾಥ ಭಂಡಾರಿ ಅವರು ಶಿಕ್ಷಣ ಕ್ಷೇತ್ರದ ಕುರಿತಾದ ನಿರ್ಧಾರಗಳನ್ನು ಮೆಚ್ಚಿದ್ದಾರೆ. “ನಮ್ಮ ಜಿಲ್ಲೆ ಶಿಕ್ಷಣದ ಕಾಶಿ. ಇಲ್ಲಿನ ಯುವಜನತೆಗೆ ಕೇವಲ ಪದವಿಗಿಂತ ಉದ್ಯೋಗಾಧಾರಿತ ಕೌಶಲ್ಯಗಳ ಅಗತ್ಯವಿದೆ. ಮಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಸ್ಥಾಪನೆ ಮತ್ತು ಕೃತಕ ಬುದ್ಧಿಮತ್ತೆ (AI) ಆಧಾರಿತ ತರಬೇತಿಗಳಿಗೆ ಆದ್ಯತೆ ನೀಡಿರುವುದು ಯುವಜನತೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಹಾಕಲಿದೆ“ ಎಂದಿದ್ದಾರೆ.

ಬಜೆಟ್ನ ಪ್ರಮುಖ ಮುಖ್ಯಾಂಶಗಳು:
ಆಧುನಿಕ ತಂತ್ರಜ್ಞಾನ: ರಾಜ್ಯದ ಆಡಳಿತದಲ್ಲಿ ಎಐ ಮಿಷನ್ ಜಾರಿ ಮತ್ತು ತಂತ್ರಜ್ಞಾನಕ್ಕೆ ನೀಡಿರುವ ಒತ್ತು ಕರ್ನಾಟಕವನ್ನು ಮುಂಚೂಣಿಯಲ್ಲಿಡಲಿದೆ.
ಸಂಪರ್ಕ ಕ್ರಾಂತಿ: ಕರಾವಳಿಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವುದು ಆರ್ಥಿಕ ವಹಿವಾಟಿಗೆ ಪೂರಕ.
ಸಾಮಾಜಿಕ ನ್ಯಾಯ: ಮಹಿಳಾ ಸಬಲೀಕರಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳು ಸಾಮಾಜಿಕ ಸಮಾನತೆಯನ್ನು ಎತ್ತಿ ಹಿಡಿಯುತ್ತವೆ.
“ಸರ್ಕಾರವು ಸಮತೋಲಿತ ಬಜೆಟ್ ಮಂಡಿಸುವ ಮೂಲಕ ದಕ್ಷಿಣ ಕನ್ನಡದ ಸರ್ವತೋಮುಖ ಏಳಿಗೆಗೆ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಇದು ಜಿಲ್ಲೆಯ ಉದ್ಯಮ, ಶಿಕ್ಷಣ ಮತ್ತು ಪ್ರವಾಸೋದ್ಯಮದ ಮೇಲೆ ಸಕಾರಾತ್ಮಕ ಪ್ರಭಾವ ಬೀರಲಿದೆ,” ಎಂದು ಮಂಜುನಾಥ ಭಂಡಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
