ಬೆಂಗಳೂರು: ಕರ್ನಾಟಕದ ಸಾಂಪ್ರದಾಯಿಕ ಕ್ರೀಡೆ ಕಂಬಳವನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ನಡೆಸಬಾರದು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.10) ವಜಾಗೊಳಿಸಿದೆ.

“ಒಂದು ಸಂಸ್ಕೃತಿಯನ್ನು ರಾಜ್ಯದ ಇತರ ಭಾಗಗಳ ಜನರಿಗೂ ಪರಿಚಯಿಸುವುದರಲ್ಲಿ ತಪ್ಪೇನಿದೆ? ಅದನ್ನು ಕೇವಲ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು?” ಎಂದು ನ್ಯಾಯಾಲಯವು ಅರ್ಜಿದಾರರನ್ನು ಪ್ರಶ್ನಿಸಿದೆ.

ಕರ್ನಾಟಕ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪ್ರಾಣಿ ಹಕ್ಕುಗಳ ಸಂಘಟನೆ “ಪೇಟಾ”(PETA) ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪೇಟಾ ಪರ ವಕೀಲರು, “ಇದು ಕೇವಲ ಕರಾವಳಿ ಜಿಲ್ಲೆಗಳ ಸಂಪ್ರದಾಯವಾಗಿದ್ದು, ಬೆಂಗಳೂರಿನ ಸಂಸ್ಕೃತಿಗೂ ಇದಕ್ಕೂ ಸಂಬಂಧವಿಲ್ಲ” ಎಂದು ವಾದಿಸಿದ್ದರು. ಈ ವಾದವನ್ನು ತಳ್ಳಿಹಾಕಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು, ಸಾಂಸ್ಕೃತಿಕ ಪರಂಪರೆಯನ್ನು ಪಸರಿಸುವ ಹಕ್ಕನ್ನು ಎತ್ತಿ ಹಿಡಿಯಿತು.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಮೆಹ್ತಾ ಅವರು, “ರಾಜ್ಯದ ಬೇರೆ ಭಾಗದ ಜನರು ಈ ಕ್ರೀಡೆ ಮತ್ತು ಸಂಸ್ಕೃತಿಯನ್ನು ತಿಳಿದುಕೊಳ್ಳಲಿ. ಇದಕ್ಕೆ ಯಾವುದೇ ಅಡೆತಡೆ ಬೇಡ” ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲದೆ, ಅರ್ಜಿಯನ್ನು ವಜಾಗೊಳಿಸುವ ವೇಳೆ ಪೀಠವು, “ಮುಂಬರುವ ದಿನಗಳಲ್ಲಿ ನಾವು ಪೇಟಾ ಸಂಘಟನೆಗೂ ಕೆಲವು ಪ್ರಶ್ನೆಗಳನ್ನು ಕೇಳಬೇಕಾಗುತ್ತದೆ” ಎಂದು ಮಾರ್ಮಿಕವಾಗಿ ಎಚ್ಚರಿಸಿತು.

ಈ ಹಿಂದೆಯೇ ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠವು ತಮಿಳುನಾಡಿನ ಜಲ್ಲಿಕಟ್ಟು ಮತ್ತು ಕರ್ನಾಟಕದ ಕಂಬಳದಂತಹ ಕ್ರೀಡೆಗಳನ್ನು ನಡೆಸಲು ಅನುವು ಮಾಡಿಕೊಡುವ ಶಾಸನಬದ್ಧ ತಿದ್ದುಪಡಿಗಳನ್ನು ಎತ್ತಿ ಹಿಡಿದಿತ್ತು. ಈಗಿನ ತೀರ್ಪಿನೊಂದಿಗೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಂಬಳ ಆಯೋಜಿಸಲು ಇದ್ದ ಅಡ್ಡಿಗಳು ದೂರವಾದಂತಾಗಿದೆ. ಕರಾವಳಿಯ ಹೆಮ್ಮೆಯ ಸಂಪ್ರದಾಯವನ್ನು ದೇಶದಾದ್ಯಂತ ಪಸರಿಸಲು ಉತ್ಸುಕರಾಗಿರುವ ಕಂಬಳಾಭಿಮಾನಿಗಳಿಗೆ ಈ ತೀರ್ಪು ಭಾರಿ ಖುಷಿ ತಂದಿದೆ.