ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಕೈಕಂಬ ಜಂಕ್ಷನ್ ಬಳಿ ಬುಧವಾರ ಬೆಳ್ಳಂಬೆಳಿಗ್ಗೆ ಸೈಕಲ್ಗೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೃತ ಸೈಕಲ್ ಸವಾರನನ್ನು ಬಂಟ್ವಾಳದ ಶಾಂತಿ ಅಂಗಡಿ ನಿವಾಸಿ ಗಾಡ್ವಿನ್ (45) ಎಂದು ಗುರುತಿಸಲಾಗಿದೆ. ಬುಧವಾರ ಬೆಳಿಗ್ಗೆ ಗಾಡ್ವಿನ್ ಅವರು ತಮ್ಮ ಸೈಕಲ್ನಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಗಾಡ್ವಿನ್ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಅತಿಯಾದ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿದ ತಕ್ಷಣ ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾಧಿಕಾರಿ ಆದರ್ಶ್ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
