
ಯಲ್ಲಾಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಚಾಲಕ ಸಜೀವ ದಹನವಾಗಿರುವ ಘಟನೆ ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬುಧವಾರ(ಏ.8) ನಡೆದಿದೆ.

ಹುಬ್ಬಳ್ಳಿಯಿಂದ ಅಂಕೋಲಾದತ್ತ ಸಾಗುತ್ತಿದ್ದ ವೋಕ್ಸ್ವ್ಯಾಗನ್ ಕಂಪನಿಯ ಕಾರು, ಯಲ್ಲಾಪುರದ ತಾಳಿಕುಂಬ್ರಿ ಬಸ್ ತಂಗುದಾಣದ ಬಳಿ ತಲುಪುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಇಡೀ ಕಾರನ್ನು ಆವರಿಸಿದೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಚಾಲಕ ಹೊರಬರಲಾಗದೆ ಬೆಂಕಿಗೆ ಆಹುತಿಯಾಗಿದ್ದಾರೆ. ಚಾಲಕನ ಗುರುತು ಪತ್ತೆಹಚ್ಚುವುದು ಸದ್ಯಕ್ಕೆ ಕಷ್ಟಸಾಧ್ಯವಾಗಿದೆ.

ವಿಷಯ ತಿಳಿದ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ತನಿಖೆ ನಡೆಯುತ್ತಿದ್ದು, ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
