ಬಂಟ್ವಾಳ: ಮಂಚಿಯ ಹವ್ಯಾಸಿ ರಂಗಭೂಮಿ ಕಲಾವಿದ ಮಿಥುನ್ ಪೂಜಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಮಿಥುನ್ ಪೂಜಾರಿ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಪಾತ್ರಾಡಿ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದರು. ಹಾಗೆಯೇ ಅವರು ರಂಗಭೂಮಿ ಚಟುವಟಿಕೆಗಳಲ್ಲಿ ಬಹಳ ಸಕ್ರಿಯರಾಗಿದ್ದರು.

ಇತ್ತೀಚೆಗಷ್ಟೇ ಇರಾ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸಿದ್ದ ಅವರು ಅಲ್ಲಿಯೇ ವಾಸಮಾಡುತ್ತಿದ್ದರು. ಆದರೆ ಮಂಚಿ ಸಮೀಪವಿದ್ದ ತಮ್ಮ ಹಳೆಯ ಮನೆಯ ತೋಟಕ್ಕೆ ನೀರುಣಿಸುವ ಕೆಲಸಕ್ಕಾಗಿ ಅವರು ಆಗಾಗ ಭೇಟಿ ನೀಡುತ್ತಿದ್ದರು ಎಂದು ತಿಳಿದು ಬಂದಿದೆ.

ಅದರಂತೆ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಮಿಥುನ್, ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಮತ್ತು ಸ್ಥಳೀಯರು ಹಳೆಯ ಮನೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅವರು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.