ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲ ಮಂಗಳ ಗಂಗೋತ್ರಿಯ ಆವರಣದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೊಣಾಜೆ ಗ್ರಾಮ ಪಂಚಾಯತ್ ವಿಶ್ವವಿದ್ಯಾನಿಲಯಕ್ಕೆ ₹25,000 ದಂಡ ವಿಧಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪಂಚಾಯತ್ ಈ ಕಠಿಣ ಕ್ರಮ ಕೈಗೊಂಡಿದೆ.



ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರಂತರವಾಗಿ ಕಸ ಸುಡಲಾಗುತ್ತಿದೆ ಎಂಬ ಬಗ್ಗೆ ಗ್ರಾಮ ಪಂಚಾಯತ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಬುಧವಾರ (ಏಪ್ರಿಲ್ 29, 2026) ಕೊಣಾಜೆ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಜಂಟಿಯಾಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದರು.

ಪರಿಶೀಲನೆಯ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯವು ತನ್ನ ಕಸವನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡುವ ಬದಲಾಗಿ, ರಾಶಿ ಹಾಕಿ ಸುಡುತ್ತಿರುವುದು ಪತ್ತೆಯಾಗಿದೆ. ಈ ರೀತಿ ಕಸ ಮತ್ತು ಪ್ಲಾಸ್ಟಿಕ್ ಸುಡುವುದರಿಂದ ಹೊರಬರುವ ಹೊಗೆ ಸಾರ್ವಜನಿಕ ಆರೋಗ್ಯಕ್ಕೆ ಮಾರಕವಾಗಿದೆ ಎಂದು ವೈದ್ಯಾಧಿಕಾರಿಗಳು ವರದಿ ನೀಡಿದ್ದಾರೆ. ಈ ವರದಿಯ ಆಧಾರದ ಮೇಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ದಂಡದ ನೋಟಿಸ್ ಜಾರಿ ಮಾಡಿದ್ದಾರೆ.

ಎಫ್ಐಆರ್ ದಾಖಲಿಸುವ ಎಚ್ಚರಿಕೆ:
ವಿಧಿಸಲಾಗಿರುವ ₹25,000 ದಂಡದ ಮೊತ್ತವನ್ನು ಮುಂದಿನ 10 ದಿನಗಳ ಒಳಗಾಗಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಪಂಚಾಯತ್ ಸೂಚಿಸಿದೆ. ಒಂದು ವೇಳೆ ದಂಡ ಪಾವತಿಸಲು ವಿಫಲವಾದಲ್ಲಿ ವಿಶ್ವವಿದ್ಯಾನಿಲಯದ ವಿರುದ್ಧ ಎಫ್ಐಆರ್ (FIR) ದಾಖಲಿಸಲಾಗುವುದು ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
