
ಬೆಂಗಳೂರು: ಹೋಲ್ಸೇಲ್ ದರದಲ್ಲಿ ಚಿನ್ನ ಖರೀದಿಸುವ ನೆಪದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ನಗರತ್ ಪೇಟೆಯ ಪ್ರಸಿದ್ಧ ಮೆಹ್ತಾ ಜ್ಯುವೆಲ್ಲರಿ ಶಾಪ್ನಲ್ಲಿ ನಡೆದಿದೆ.

ವಂಚಕರು ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣಗಳೊಂದಿಗೆ ದೋಚಿದ್ದಾರೆ.

ಮೆಹ್ತಾ ಜ್ಯುವೆಲ್ಲರಿ ಮಾಲೀಕರಿಗೆ ಪರೇಶ್ ಸೋನಿ ಎಂಬಾತ ಕರೆ ಮಾಡಿ, ತಮಗೆ ‘ಮಾಹಿ ಎಂಟರ್ಪ್ರೈಸಸ್’ ಹೆಸರಿನ ಸಂಸ್ಥೆ ಇದ್ದು, ಹೋಲ್ಸೇಲ್ ದರದಲ್ಲಿ ಭಾರಿ ಪ್ರಮಾಣದ ಆಭರಣಗಳು ಬೇಕಾಗಿವೆ ಎಂದು ನಂಬಿಸಿ ಆಫೀಸ್ಗೆ ಕರೆಸಿಕೊಂಡಿದ್ದ. ಆತ ತನಗೂ ಮತ್ತು ತನ್ನ ವ್ಯವಹಾರಕ್ಕೂ ಯಾವುದೇ ಸಂಬಂಧವಿಲ್ಲದ ಮಲ್ಲೇಶ್ವರಂನ ಕಚೇರಿಯೊಂದರ ಬಾಗಿಲಿನ ಮೇಲೆ ‘ಲೋಟಸ್ ಜ್ಯುವೆಲ್ಲರಿ’ ಮತ್ತು ‘ಮಾಹಿ ಎಂಟರ್ಪ್ರೈಸಸ್’ ಎಂದು ನಕಲಿ ಬೋರ್ಡ್ ಹಾಕಿ ಈ ವ್ಯವಸ್ಥಿತ ಸಂಚು ರೂಪಿಸಿದ್ದ. ವ್ಯಾಪಾರದ ಆರ್ಡರ್ ದೊಡ್ಡದಿದೆ ಎಂದು ನಂಬಿದ ಜ್ಯುವೆಲ್ಲರಿ ಮ್ಯಾನೇಜರ್, ಮಾಲೀಕರ ಸೂಚನೆಯಂತೆ ಬರೋಬ್ಬರಿ 3 ಕೆಜಿ ಚಿನ್ನಾಭರಣಗಳನ್ನು ತೆಗೆದುಕೊಂಡು ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿದ್ದ ಪರೇಶ್ ಸೋನಿ ಕಚೇರಿಗೆ ಹೋಗಿದ್ದರು. ಮ್ಯಾನೇಜರ್ ಆಭರಣ ತಂದಾಗ, ಅವುಗಳ ವಿನ್ಯಾಸವನ್ನು ಪರಿಶೀಲಿಸುವಂತೆ ನಟಿಸಿ, ಪಕ್ಕದ ಕ್ಯಾಬಿನ್ನಲ್ಲಿ ಕುಳಿತಿದ್ದ ತನ್ನ ಸಹಚರ ಚಂದ್ರಶೇಖರ್ ಎಂಬಾತನಿಗೆ ಒಪ್ಪಿಸಿ ಆಭರಣಗಳ ಪಟ್ಟಿ ಸಿದ್ಧಪಡಿಸಲು ಹೇಳಿದ್ದ.

ಆಭರಣಗಳ ಫೋಟೋ ತೆಗೆಯುವ ನೆಪದಲ್ಲಿ ಪಕ್ಕದ ಕೋಣೆಗೆ ಹೋದ ಆರೋಪಿಗಳು ಅಲ್ಲಿಂದಲೇ ಚಿನ್ನದೊಂದಿಗೆ ನಾಪತ್ತೆಯಾಗಿದ್ದಾರೆ. ಒಳಗೆ ಹೋದವರು ಎಷ್ಟು ಹೊತ್ತಾದರೂ ಬಾರದೇ ಇದ್ದಾಗ ಅನುಮಾನಗೊಂಡು ಮ್ಯಾನೇಜರ್ ಪರಿಶೀಲಿಸಿದಾಗ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ಯಾಮ್, ರಾಮಚಂದ್ರ ಹಾಗೂ ಪರೇಶ್ ಸೋನಿ ಎಂಬುವವರ ವಿರುದ್ಧ ಸಂತ್ರಸ್ತ ಉದ್ಯಮಿ ದೂರು ನೀಡಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.