
ಸುರತ್ಕಲ್: ಅಪ್ರಾಪ್ತ ಗರ್ಭಿಣಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾಟಿಪಳ್ಳದ ಸಂತ್ರಸ್ತೆಯ ಮನೆಗೆ ಮಂಗಳೂರು ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಶುಕ್ರವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಪ್ರಕರಣದ ಕುರಿತು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕಳವಳಕಾರಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಯುವತಿ ಇದ್ದ ತಂಡದಲ್ಲಿ ಡ್ರಗ್ಸ್ ಬಳಕೆ ಆಗುತ್ತಿದ್ದ ಬಗ್ಗೆ ಪೊಲೀಸರು ಈ ಹಿಂದೆಯೇ ಗಂಭೀರ ಎಚ್ಚರಿಕೆ ನೀಡಿದ್ದರು ಎಂಬ ಬಗ್ಗೆ ಹೇಳಿದ್ದಾರೆ.
ಈ ಬಗ್ಗೆ ಪೊಲೀಸ್ ಇಲಾಖೆ ಕೂಲಂಕುಶವಾಗಿ ತನಿಕೆಯನ್ನು ಮಾಡಿ ಸತ್ಯವನ್ನು ಹೊರ ತರುವ ಮೂಲಕ ಅಪರಾಧಿಗಳಿಗೆ ಶಿಕ್ಷೆಯಗುವಂತೆ ಮಾಡಬೇಕು ಎಂಬುದು ನಮ್ಮ ಒತ್ತಾಯವಾಗಿದೆ.

ಇತ್ತೀಚಿನ ದಿನಗಳಲ್ಲಿ ಯುವಜನತೆ ಡ್ರಗ್ಸ್ ಜಾಲಕ್ಕೆ ಸಿಲುಕುತ್ತಿರುವುದು ಆತಂಕಕಾರಿ. ಈ ನಿಟ್ಟಿನಲ್ಲಿ ಮಕ್ಕಳ ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಜಾಗರೂಕರಾಗಬೇಕು ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು.
ಈ ದುರಂತವು ಇಡೀ ಸಮಾಜಕ್ಕೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತ ಪೂಜಾರಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳ ದುರ್ಬಳಕೆ ಹಾಗೂ ತಪ್ಪು ಜೀವನಶೈಲಿಯ ಬಗ್ಗೆ ಅತ್ಯಂತ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಮನವಿ ಮಾಡಿದ್ದಾರೆ.ಬಿಜೆಪಿ ಉತ್ತರ ಮಂಡಲ ಅಧ್ಯಕ್ಷೆ ಲಕ್ಷ್ಮೀ ಆಚಾರ್ಯ, ಪ್ರ ಧಾನ ಕಾರ್ಯದರ್ಶಿ ಸ್ವಪ್ನ ಸನಿಲ್, ಸದಸ್ಯೆ ಶೈಲಜಾ, ವೇದಾವತಿ,ಮಾಜಿ ಮನಪ ಸದಸ್ಯ ಲೋಕೇಶ್ ಬೊಳ್ಳಾಜೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರಾದ ಪ್ರೇಮ್ ಡಿಸೋಜಾ,ಮಹಿಳಾ ಸದಸ್ಯರು ಉಪಸ್ಥಿತರಿದ್ದರು.