
ಮಂಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕಾರ್ಯಕರ್ತರ ಅಭಿಪ್ರಾಯ ಪಡೆದು ನಡೆಯಬೇಕು ಎಂಬ ಉದ್ದೇಶದಿಂದ ಎಐಸಿಸಿ, ಕೆಪಿಸಿಸಿ ಮತ್ತು ರಾಜ್ಯದಿಂದ ವೀಕ್ಷಕರನ್ನು ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ನಾಳೆ ಬೆಳಗ್ಗೆ ವೀಕ್ಷಕರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಂದು ಸಭೆ ನಡೆಸಿ ಮಾಧ್ಯಮ ಗೋಷ್ಠಿ ನಡೆಸಲಿದ್ದಾರೆ. ಬಳಿಕ ಸರ್ವಸದಸ್ಯರ ಸಭೆ ನಡೆದು ಮಧ್ಯಾಹ್ನದ ಬಳಿಕ ಕಾಂಗ್ರೆಸ್ ಪ್ರಮುಖ ನಾಯಕರನ್ನು ವೈಯಕ್ತಿಕವಾಗಿ ಭೇಟಿಯಾಗಿ ಸಂಜೆಯೊಳಗೆ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಹಾಲಿ ಅಧ್ಯಕ್ಷರು 5 ವರ್ಷಗಳನ್ನು ಪೂರೈಸಿದ್ದರೆ ಅವರಿಗೆ ಮತ್ತೆ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ಅವಕಾಶ ಇಲ್ಲ ಎಂದರು.
ಬುಧವಾರ ಜು.29ರಿಂದ ಆ.12ರವರೆಗೆ 8 ವಿಧಾನಸಭಾ ಕ್ಷೇತ್ರ ಹಾಗೂ 16 ಬ್ಲಾಕ್ ಸಮಿತಿಗಳನ್ನು ಭೇಟಿಮಾಡಿ ಸ್ಥಳೀಯ ಮುಖಂಡರನ್ನು ಭೇಟಿಮಾಡಿ ಸಲಹೆಯನ್ನು ಪಡೆದುಕೊಂಡು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬಂದ ಅರ್ಜಿಗಳನ್ನು ಪರಿಶೀಲಿಸಿ 3ರಿಂದ 7 ಅರ್ಜಿಗಳನ್ನು ಶಿಫಾರಸ್ಸು ಮಾಡಲಿದ್ದಾರೆ.
ನಂತರ ಎಐಸಿಸಿ, ಕೆಪಿಸಿಸಿ ಹಾಗೂ ಸರಕಾರದ ಮುಖೇನ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಲಾವಣ್ಯ ಬಳ್ಳಾಲ್, ಶುಭೋದಯ ಆಳ್ವ, ಸದಾಶಿವ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು.