ತುಳುನಾಡಿನ ಸಂಸ್ಕೃತಿ, ಪರಂಪರೆಯ ಪರಿಚಯಕ್ಕೆ ‘ಆಟಿದೊಂಜಿ ದಿನ’ ವೇದಿಕೆ


ಮಂಗಳೂರು: ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ ಹಾಗೂ ಆಚಾರ–ಆಚರಣೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಕೆನರಾ ಕಾಲೇಜು (ಸ್ವಾಯತ್ತ), ಮಂಗಳೂರಿನ ತುಳು ಸಂಘದ ವತಿಯಿಂದ ‘ಆಟಿದೊಂಜಿ ದಿನ’ ಕಾರ್ಯಕ್ರಮವನ್ನು ಶನಿವಾರ ಕಾಲೇಜಿನ ಶ್ರೀಮತಿ ರತ್ನಾ ಎಸ್. ಶೆಣೈ ಸ್ಮಾರಕ ಸಭಾಂಗಣದಲ್ಲಿ ಆಯೋಜಿಸಲಾಯಿತು.
ತುಳುವರ್ಲ್ಡ್ ಫೌಂಡೇಶನ್, ಕಟೀಲ್‌ನ ಇದರ ಅಧ್ಯಕ್ಷರಾದ ಡಾ. ರಾಜೇಶ್ ಕೃಷ್ಣ ಆಳ್ವ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜನಪದ ಜೀವನ ಪದ್ಧತಿಗಳಲ್ಲಿ ‘ಆಟಿ’ ತಿಂಗಳಿಗೆ ವಿಶೇಷ ಸ್ಥಾನವಿದೆ. ಆಧುನಿಕ ಜೀವನಶೈಲಿಯ ನಡುವೆಯೂ ನಮ್ಮ ನೆಲದ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಆಚರಣೆಗಳನ್ನು ಯುವಜನರಿಗೆ ಪರಿಚಯಿಸುವ ಅಗತ್ಯವಿದೆ. ಇಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ತಮ್ಮ ನಾಡಿನ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕೆನರಾ ಕಾಲೇಜು (ಸ್ವಾಯತ್ತ)ದ ಮಾನ್ಯ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ತುಳುನಾಡಿನ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ನೆಲ, ನುಡಿ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ಬೆಳೆಸಿಕೊಳ್ಳಬೇಕು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಮ್ಮ ಪರಂಪರೆಯ ಕುರಿತಾದ ಅರಿವು ಹಾಗೂ ಅಭಿಮಾನವನ್ನು ಮೂಡಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ತುಳುನಾಡಿನ ಆಟಿ ತಿಂಗಳ ವಿಶೇಷತೆ, ಸಾಂಪ್ರದಾಯಿಕ ಆಹಾರ ಪದ್ಧತಿಗಳನ್ನು ಪರಿಚಯಿಸಲಾಯಿತು.
ತುಳುವರ್ಲ್ಡ್ ಫೌಂಡೇಶನ್ ಕಟೀಲ್ ಇದರ ಕಾರ್ಯದರ್ಶಿ ಶ್ರೀ ವಸಂತ್ ರೈ, ತುಳು ಸಂಘದ ಮುಖ್ಯ ಸಂಯೋಜಕಿ ಶ್ರೀಮತಿ ವಾಣಿ ಯು. ಎಸ್. ಹಾಗೂ ಸಹ ಸಂಯೋಜಕಿ ಅನಿಷಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕರು, ತುಳು ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಆರಾಧನ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮನ್ವಿತ್ ಸ್ವಾಗತಿಸಿದರು. ಪೂರ್ವಿ ವಂದಿಸಿದರು.

error: Content is protected !!