
ಮಂಗಳೂರು: ನಗರದ ಕೊಟ್ಟಾರ ಕ್ರಾಸ್ ಬಳಿ ಮೊಬೈಲ್ ವಿಚಾರಕ್ಕೆ ಸಂಬಂಧಿಸಿ ಅಣ್ಣನನ್ನೇ ತಮ್ಮ ಚೂರಿಯಿಂದ ಇರಿದು ಕೊಲೆಗೈದ ಘಟನೆ ನಿನ್ನೆ ತಡರಾತ್ರಿ ನಡೆದಿದ್ದು ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಅಡಿವೆಪ್ಪ(40) ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ. ರಾಜು (36) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಇವರು ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲದವರಾಗಿದ್ದು ಕೊಟ್ಟಾರ ಕ್ರಾಸ್ ಬಳಿ ಬಾಡಿಗೆ ಮನೆಯಲ್ಲಿ ತಾಯಿಯ ಜೊತೆಗೆ ವಾಸವಾಗಿದ್ದರು.

ಅಡಿವೆಪ್ಪ ಮತ್ತು ರಾಜು ವಿಪರೀತ ಕುಡಿತದ ಚಟ ಹೊಂದಿದ್ದು ನಿನ್ನೆ ತಡರಾತ್ರಿ ಪರಸ್ಪರ ಹೊಡೆದಾಡಿದ್ದರು. ತಾಯಿ ಗೂಡಂಗಡಿ ವ್ಯಾಪಾರ ಮಾಡಿಕೊಂಡಿದ್ದು ಅವರು ಮನೆಗೆ ಬಂದಾಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಮೃತಪಟ್ಟಿದ್ದರು.
ಸ್ಥಳಕ್ಕೆ ಉರ್ವ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
