
ಹಳೆಯಂಗಡಿ: ಮಳೆಗಾಲದಲ್ಲೂ ಕುಡಿಯುವ ನೀರಿಗಾಗಿ ಜನ ಪರದಾಡುವ ಪರಿಸ್ಥಿತಿ ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು 1ನೇ ವಾರ್ಡ್ ನ ಕೆರೆಕಾಡು ಪ್ರದೇಶದಲ್ಲಿ ನಿರ್ಮಾಣವಾಗಿದೆ.
ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ. ಪಂಚಾಯತ್ ಆಡಳಿತದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನೀರಿನ ಸಮಸ್ಯೆ ಬಗ್ಗೆ ಪಂಚಾಯತಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲೇ ಈ ಪರಿಸ್ಥಿತಿ ಇದ್ದರೆ ಬೇಸಿಗೆಯಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಪಡುಪಣಂಬೂರು ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ನಿಕಟಪೂರ್ವ ಪಂಚಾಯತ್ ಸದಸ್ಯರಾದ ವಿನೋದ್ ಬೆಳ್ಳಾಯರು ಅವರು ಮಾನವೀಯತೆ ಮೆರೆದಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ ಟ್ಯಾಂಕರ್ ಮೂಲಕ ಕೆರೆಕಾಡು ವ್ಯಾಪ್ತಿಯ ನೀರಿನ ಸಮಸ್ಯೆ ಎದುರಿಸುತ್ತಿರುವ ಹಲವು ಮನೆಗಳಿಗೆ ಉಚಿತವಾಗಿ ಕುಡಿಯುವ ನೀರನ್ನು ಪೂರೈಸಿ ಜನರ ದಾಹ ತಣಿಸಿದ್ದಾರೆ.

ವಿನೋದ್ ಸಾಲ್ಯಾನ್ ಅವರ ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಪಂಚಾಯತ್ ಆಡಳಿತ ಕೂಡಲೇ ಎಚ್ಚೆತ್ತುಕೊಂಡು ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
